ಬಿಜೆಪಿ ಶಾಸಕ ಬಿ.ಪಿ. ಹರೀಶ್ಗೆ ಸಂಕಷ್ಟ

ಕೋರ್ಟ್ನಿಂದ ಬಂಧನ ವಾರೆಂಟ್


ದಾವಣಗೆರೆ: ಕೋರ್ಟ್ ವಿಚಾರಣೆಗೆ ಗೈರಾದ ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಸಂಕಷ್ಟಕ್ಕೆ ಸಿಲುಕಿದ್ದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನ ವಾರೆಂಟ್ ಜಾರಿ ಮಾಡಿದೆ.
ಶಾಸಕ ಬಿ.ಪಿ. ಹರೀಶ್ ಅಥವಾ ಅವರ ಪರ ವಕೀಲರಾಗಲಿ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಶಾಸಕರ ವಿರುದ್ಧ ಸೋಮವಾರ ಬಂಧನ ವಾರೆಂಟ್ ಜಾರಿಗೊಳಿಸಿದ್ದಾರೆ. ಮುಂದಿನ ವಿಚಾರಣೆ ಗುರುವಾರಕ್ಕೆ ನಿಗದಿಪಡಿಸಲಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಬಿ.ಪಿ.ಹರೀಶ್ ರನ್ನು ಅಭಿನಂದಿಸಲು 2023ರ ಮೇ 16ರಂದು ಹರಿಹರ ನಗರಸಭೆಯ ಪೌರಕಾರ್ಮಿಕರು ಹಾಗೂ ಮಾದಿಗ ಸಮಾಜದ ಮುಖಂಡರು ತೆರಳಿದ್ದರು. ಈ ವೇಳೆ ಚುನಾವಣೆಯಲ್ಲಿ ತನಗೆ ಬೆಂಬಲ ನೀಡಿಲ್ಲ ಎಂದು ಶಾಸಕರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಪೌರಕಾರ್ಮಿಕರು ಆರೋಪಿಸಿದ್ದರು.ಬಳಿಕ ಇದು ರಾಜೀ ಮಾತುಕತೆಯಲ್ಲಿ ಮುಗಿದಿತ್ತು. ಆದರೆ, ಅಭಿನಂದನೆ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು ಈ ಕುರಿತಾಗಿ ಬಿಎಸ್ಪಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಹನುಮಂತಪ್ಪ ಹರಿಹರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು.ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್ ಈ ಪ್ರಕರಣವನ್ನು ದಾವಣಗೆರೆಯ ವಿಶೇಷ ಜಿಲ್ಲಾ ನ್ಯಾಯಾಲಯದಿಂದ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಆದೇಶಿಸಿತ್ತು. ಇದರ ವಿಚಾರಣೆಗೆ ಹರೀಶ್ ಗೈರಾಗಿದ್ದರು.
BPHarish #BJPMLA #Harihara #Davanagere #BengaluruCourt #ArrestWarrant #SpecialCourt




