
ಕಲಬುರಗಿ: ಆಳಂದದ ರಾಘವ ಚೈತನ್ಯ ಮಂದಿರದ ಗಲಾಟೆ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ವಾಪಸ್ ಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ್ದು ಸಂಪೂರ್ಣ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂಗಳ ಭಾವನೆಗೆ ಬೆಲೆಯೇ ಇಲ್ವ!
“ಆಳಂದದ ರಾಘವ ಚೈತನ್ಯ ಮಂದಿರದ ಗಲಾಟೆ ಕೇಸ್ ಅನ್ನು ಸರ್ಕಾರ ದುರುದ್ದೇಶಪೂರ್ವಕವಾಗಿ ವಾಪಸ್ ಪಡೆದಿದೆ. ಅಯೋಗ್ಯರ ಮೇಲಿದ್ದ ಕೇಸ್ಗಳನ್ನು ಕೈಬಿಡುವ ಮೂಲಕ ಕಾಂಗ್ರೆಸ್ ಸರ್ಕಾರ ಹಿಂದೂಗಳಿಗೆ ಭಾರಿ ಅಪಮಾನ ಮಾಡಿದೆ. ಕೇವಲ ಅಲ್ಪಸಂಖ್ಯಾತರ ಮತಗಳಿಂದಲೇ ನಾವು ಗೆದ್ದು ಅಧಿಕಾರಕ್ಕೆ ಬಂದಿದ್ದೇವೆ ಎನ್ನುವ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಅದಕ್ಕಾಗಿಯೇ ನಿರಂತರವಾಗಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ” ಎಂದು ವಿಜಯೇಂದ್ರ ಕಿಡಿಕಾರಿದರು. “ಇಂದು ಕಲಬುರಗಿಯಲ್ಲಿ ಸಾಂಕೇತಿಕವಾಗಿ ಹೋರಾಟ ಹಮ್ಮಿಕೊಂಡಿದ್ದೇವೆ. ಈ ಹಿಂದೂ ವಿರೋಧಿ ಸರ್ಕಾರದ ವಿರುದ್ಧ ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ರೂಪಿಸಲಾಗುವುದು.”ಎಂದರು.
ಮೂರು ವರ್ಷಗಳಲ್ಲಿ ಕಾಂಗ್ರೆಸ್ ನ ಭ್ರಷ್ಟಾಚಾರ ತಾಂಡವ!
ಕಳೆದ ಮೂರು ವರ್ಷಗಳ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ ಎಂದು ಆರೋಪಿಸಿದ ವಿಜಯೇಂದ್ರ, ಸರ್ಕಾರದ ವಿರುದ್ಧ ಸಾಲು ಸಾಲು ಆರೋಪಗಳ ಪಟ್ಟಿಯನ್ನೇ ಜನತೆಯ ಮುಂದಿಟ್ಟರು. ಸರ್ಕಾರದ ಏಕೈಕ ಕೆಲಸವೆಂದರೆ ಅಲ್ಪಸಂಖ್ಯಾತರ ಓಲೈಕೆ ಮಾಡುವುದು ಮಾತ್ರವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಯುವಕರಿಗೆ ಉದ್ಯೋಗವಿಲ್ಲದೆ ನಿರುದ್ಯೋಗ ದಿನೇ ದಿನೇ ಹೆಚ್ಚಾಗುತ್ತಿದೆ. ಮೀಸಲಾತಿ ವಿಷಯದಲ್ಲಿ ಸರ್ಕಾರ ಗೊಂದಲ ಸೃಷ್ಟಿಸಿ, ಲಕ್ಷಾಂತರ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಶಾಲಾ-ಕಾಲೇಜು ಸಮವಸ್ತ್ರದ ವಿಚಾರದಲ್ಲಿ ಸರ್ಕಾರ ಮತ್ತೆ ಹಿಜಾಬ್ ಆದೇಶ ತಂದು ವಿದ್ಯಾರ್ಥಿಗಳಲ್ಲಿ ದ್ವೇಷದ ಭಾವನೆ ಬಿತ್ತುವ ಕೆಲಸ ಮಾಡುತ್ತಿದೆ. ಅಧಿಕಾರದ ಮದದಿಂದ ಎಲ್ಲವನ್ನೂ ಅರಗಿಸಿಕೊಳ್ಳುತ್ತೇವೆ ಎಂಬ ಅಹಂಕಾರದಲ್ಲಿದ್ದಾರೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದರೂ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಸಾಧ್ಯವಿಲ್ಲ.
ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಬಗ್ಗೆ ಮಾತನಾಡಿದ ಅವರು, “ಯಾರೋ ಮುಠ್ಠಾಳರು ನನ್ನ ವಿರುದ್ಧ ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಯಾರ ಜೊತೆಯೂ ಯಾವುದೇ ರೀತಿಯ ವ್ಯವಹಾರ ಇಟ್ಟುಕೊಂಡಿಲ್ಲ” ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಕೇಳಲಾದ ಪ್ರಶ್ನೆಗೆ, “ಎಲ್ಲವನ್ನೂ ಕಾದು ನೋಡೋಣ” ಎಂದು ಮಾರ್ಮಿಕವಾಗಿ ಉತ್ತರಿಸಿದರು.
#FreedomTV #BYVijayendra #KalaburagiPressMeet #AlandCase #KarnatakaPolitics #BJPVsCongress #HinduPratibhatane #KarnatakaNews #CongressAntiHindu #DKShivakumar #Siddaramaiah #HijabRow #PoliticalUpdates




