
ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭವ್ಯ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ಸಂಪೂರ್ಣವಾಗಿ ಸಜ್ಜಾಗಿದೆ. ಜೂನ್ 3ರಂದು (ಬುಧವಾರ) ನಡೆಯಲಿರುವ ಈ ಮುಖ್ಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿರುವ (MS Building) ಸರ್ಕಾರಿ ಕಚೇರಿಗಳಿಗೆ ಸರ್ಕಾರ ಅರ್ಧ ದಿನದ ಅಧಿಕೃತ ರಜೆಯನ್ನು ಘೋಷಿಸಲಾಗಿದೆ. ಕರ್ನಾಟಕ ರಾಜ್ಯಪಾಲರ ಆದೇಶದ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಈ ಕುರಿತು ಮಹತ್ವದ ಅಧಿಸೂಚನೆಯನ್ನು ಹೊರಡಿಸಿದೆ.

ವಿಧಾನಸೌಧದ ಆವರಣದಲ್ಲೇ ಅದ್ಧೂರಿ ಸಮಾರಂಭ
ಡಿಪಿಎಆರ್ (DPAR) ಪ್ರಕಟಣೆಯ ಪ್ರಕಾರ, ಜೂನ್ 3ರ ಬುಧವಾರ ಸಂಜೆ 4:05ಕ್ಕೆ ವಿಧಾನಸೌಧದ ಆವರಣದಲ್ಲಿ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ದೇಶದ ಪ್ರಮುಖ ರಾಜಕೀಯ ಗಣ್ಯರು, ವಿವಿಧ ರಾಜ್ಯಗಳ ಮುಖಂಡರು, ಚುನಾಯಿತ ಪ್ರತಿನಿಧಿಗಳು ಹಾಗೂ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಾರ್ವಜನಿಕರು ಮತ್ತು ಕಾರ್ಯಕರ್ತರು ರಾಜಧಾನಿಗೆ ಲಗ್ಗೆ ಇಡುತ್ತಿದ್ದಾರೆ.
ವಿಧಾನಸೌಧದ ಸುತ್ತಮುತ್ತ ಅತ್ಯಂತ ಬಿಗಿ ಭದ್ರತಾ ವ್ಯವಸ್ಥೆ, ಸಂಚಾರ ನಿಯಂತ್ರಣ ಹಾಗೂ ಇಡೀ ಸಮಾರಂಭವು ಯಾವುದೇ ಅಡೆತಡೆ ಇಲ್ಲದೆ ಸುಗಮವಾಗಿ ನಡೆಯಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ನಾಳೆ ಮಧ್ಯಾಹ್ನದ ನಂತರ ವಿಧಾನಸೌಧದ ಆವರಣ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ಭಾರಿ ಜನದಟ್ಟಣೆ ಮತ್ತು ಗಣ್ಯರ ವಾಹನಗಳ ಸಂಚಾರ ಹೆಚ್ಚಾಗಲಿದೆ. ಸರ್ಕಾರಿ ನೌಕರರು ಮತ್ತು ಸಾರ್ವಜನಿಕರಿಗೆ ಇದರಿಂದ ಯಾವುದೇ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಮಧ್ಯಾಹ್ನದಿಂದಲೇ ವಿಧಾನಸೌಧದ ಸುತ್ತಮುತ್ತಲಿನ ಎಲ್ಲಾ ಸರ್ಕಾರಿ ಕಚೇರಿಗಳನ್ನು ಮುಚ್ಚಲು ಆದೇಶಿಸಲಾಗಿದೆ.
ವಾಹನ ಸವಾರರು ಮತ್ತು ಸಾರ್ವಜನಿಕರು ಈಗಾಗಲೇ ಸಂಚಾರಿ ಪೊಲೀಸರು ಪ್ರಕಟಿಸಿರುವ ಟ್ರಾಫಿಕ್ ಮಾರ್ಗಸೂಚಿಗಳನ್ನು ಗಮನಿಸಿ, ಪರ್ಯಾಯ ರಸ್ತೆಗಳನ್ನು ಬಳಸುವಂತೆ ತಿಳಿಸಲಾಗಿದೆ.
#DKShivakumar #SwearingInCeremony #VidhanaSoudha #HalfDayHoliday #VikasaSoudha #BengaluruNews #KarnatakaGovernment #DPAR #DKS #KarnatakaPolitics #FreedomTVKannada #BreakingNews #TrafficAdvisory




