
ವಯನಾಡು : ಕೇರಳದ ವಯನಾಡಿನಲ್ಲಿ ಮತ್ತೆ ಪ್ರಕೃತಿ ವಿಕೋಪ ಸಂಭವಿಸಿದ್ದು, ಮೆಪ್ಪಾಡಿ ಪ್ರದೇಶದಲ್ಲಿ ಸಂಭವಿಸಿದ ಭಾರಿ ಭೂಕುಸಿತದಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭಾರಿ ಮಳೆಯಿಂದಾಗಿ ಈ ದುರ್ಘಟನೆ ಸಂಭವಿಸಿದ್ದು, ಕನಿಷ್ಠ 6ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಕಳೆದ ಕೆಲ ದಿನಗಳಿಂದ ಕೇರಳದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಸಂಭವಿಸಿದೆ. ಇದರಿಂದ ಇಬ್ಬರು ಕಾರ್ಮಿಕರು ಜೀವಂತ ಸಮಾಧಿಯಾಗಿದ್ದಾರೆ. ಸುಮಾರು 20 ಮಂದಿ ಅವಶೇಷಗಳ ಅಡಿಯಲ್ಲೇ ಸಿಲುಕಿಕೊಂಡಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿದ್ದ 6 ಮಂದಿಯನ್ನ ಸ್ಥಳೀಯರು ರಕ್ಷಣೆ ಮಾಡಿದ್ದು, ಮೆಪ್ಪಾಡಿಯ ಡಾ. ಮೂಪೆನ್ಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಿಎಂ ನೇತೃತ್ವದಲ್ಲಿ ತುರ್ತು ಸಭೆ
ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಕೇರಳ ಮುಖ್ಯಮಂತ್ರಿ ಸತೀಶನ್, ಕೂಡಲೇ ಸಚಿವರು ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ತುರ್ತು ಸಭೆ ನಡೆಸಿದ್ದಾರೆ. ರಾಜ್ಯದಲ್ಲಿನ ಮಳೆಯ ಪರಿಸ್ಥಿತಿ ಮತ್ತು ರಕ್ಷಣಾ ಕಾರ್ಯಗಳ ಕುರಿತು ಚರ್ಚಿಸಿರುವ ಸಿಎಂ, ಕಂದಾಯ ಸಚಿವ ಅನಿಲ್ ಕುಮಾರ್ ಸೇರಿದಂತೆ ವಿವಿಧ ಸಚಿವರ ಜೊತೆ ಚರ್ಚೆ ನಡೆಸಿದ್ದಾರೆ.




