
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಕಾದಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿ, ಮೊಟ್ಟೆ ಎಸೆದಿರುವ ಘಟನೆ ಕ್ವೀನ್ಸ್ ರಸ್ತೆಯಲ್ಲಿ ನಡೆದಿದೆ.
ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ಪಕ್ಷವು ಬಿಜೆಪಿ ರಾಜ್ಯ ಕಚೇರಿಯ ಮುಂಭಾಗ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಇದಕ್ಕೆ ಪ್ರತಿಯಾಗಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆ ಎರಡೂ ಪಕ್ಷಗಳ ನಾಯಕರ ನಡುವೆ ಸೃಷ್ಟಿಯಾದ ಉದ್ವಿಗ್ನ ವಾತಾವರಣವು ಹಿಂಸಾಚಾರಕ್ಕೆ ತಿರುಗಿದೆ.
ಶಾಸಕ ಹರೀಶ್ ಅವರು ಕಾರಿನಿಂದ ಕೆಳಗಿಳಿಯುತ್ತಿದ್ದಂತೆಯೇ ಅಲ್ಲೇ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರು ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಜೊತೆಗೆ ಅವರ ಮೇಲೆ ಮೊಟ್ಟೆಗಳನ್ನು ತೂರಿದ್ದಾರೆ.
ಘಟನೆಯನ್ನು ಗಮನಿಸಿದ ತಕ್ಷಣವೇ ಸ್ಥಳದಲ್ಲಿದ್ದ ಪೊಲೀಸರು ಕಾರ್ಯಾಚರಣೆಗೆ ಇಳಿದು, ಶಾಸಕ ಬಿ.ಪಿ. ಹರೀಶ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರ ಹಿಡಿತದಿಂದ ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ.




