ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ‘ಬಳ್ಳಾರಿ ಚಲೋ’ – 10 ದಿನ 170 ಕಿ.ಮೀ ಪಾದಯಾತ್ರೆ ಘೋಷಣೆ!
'Ballari Chalo' demanding Nagendra's resignation

ಕರ್ನಾಟಕ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ನಾಯಕರು ‘ಬಳ್ಳಾರಿ ಚಲೋ’ ಪಾದಯಾತ್ರೆ ಹಮ್ಮಿಕೊಂಡಿದೆ.
ಸೆಪ್ಟೆಂಬರ್ 1ರಿಂದ 10ರವರೆಗೆ ಒಟ್ಟು 10 ದಿನಗಳ ಕಾಲ ಬಳ್ಳಾರಿ ಚಲೋ ಪಾದಯಾತ್ರೆ ಘೋಷಣೆ ಮಾಡಿದ್ದಾರೆ. ರಾಯಚೂರಿನಿಂದ ಬಳ್ಳಾರಿಯವರೆಗೆ ಸುಮಾರು 170 ಕಿ.ಮೀ. ಪಾದಯಾತ್ರೆ ನಡೆಯಲಿದೆ.
ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿ ಪ್ರಮುಖರಿದ್ದ ಸುದ್ದಿಗೋಷ್ಠಿಯಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಲಾಯ್ತು.
ಲಿಂಗಸುಗೂರು ಕ್ಷೇತ್ರದ ಗುರಗುಂಟದಿಂದ ಆರಂಭವಾಗುವ ಯಾತ್ರೆ ಲಿಂಗಸುಗೂರು, ಮಸ್ಕಿ , ಸಿಂಧನೂರು ಮಾರ್ಗವಾಗಿ ಬಳ್ಳಾರಿ ತಲುಪಲಿದೆ. ಇನ್ನು ಬಿಜೆಪಿ ಪಾದಯಾತ್ರೆಗೆ ಜೆಡಿಎಸ್ ಸಂಪೂರ್ಣ ಬೆಂಬಲ ಸೂಚಿಸಿದೆ. ಉದ್ಘಾಟನಾ ಸಮಾರಂಭಕ್ಕೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ & ಹೆಚ್.ಡಿ. ಕುಮಾರಸ್ವಾಮಿ ಆಗಮಿಸಲಿದ್ದು, ಬಳ್ಳಾರಿಯಲ್ಲಿ ನಡೆಯಲಿರುವ ಬೃಹತ್ ಸಮಾರೋಪ ಸಮಾವೇಶದಲ್ಲಿ ಕೇಂದ್ರದ ಪ್ರಮುಖ ಸಚಿವರು ಪಾಲ್ಗೊಳ್ಳಲಿದ್ದಾರೆ.



