ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕೋರಿಕೆ ಮೇರೆಗೆ ಬೆಂಗಳೂರು-ಬೆಳಗಾವಿ ನೂತನ ವಂದೇ ಭಾರತ್ ರೈಲು ಸೇರಿದಂತೆ ಒಟ್ಟು 3ನೇ ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10 ರಂದು ಚಾಲನೆ ನೀಡಲಿದ್ದಾರೆ. ಭಾನುವಾರ ಕರ್ನಾಟಕ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪೂಣಾ ಹಾಗೂ ಅಮೃತಸರ- ಶ್ರೀ ಮಾತಾ ವೈಷ್ಣವೊ ದೇವಿ ಕಟ್ರಾ ಮಧ್ಯೆ ನೂತನ ವಂದೇ ಭಾರತ್ ರೈಲು ಸಂಚಾರ ಆರಂಭವಾಗಲಿದೆ.
ಈ ಹಿಂದೆ ಪ್ರಹ್ಲಾದ್ ಜೋಶಿ ಕೋರಿಕೆ ಮೇರೆಗೆ ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ಸಂಚಾರ ಆರಂಭಿಸಲು ಪ್ರಧಾನಿ ಮೋದಿ ಮತ್ತು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದನೆ ನೀಡಿದ ಪ್ರಧಾನಿ ಮೋದಿ ಅವರು ಇದೀಗ 3 ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ.
ನೂತನ ವಂದೇ ಭಾರತ್ ರೈಲು ಬೆಳಗಾವಿಯಿಂದ ಬೆಳಗ್ಗೆ 5.20 ನಿಮಿಷಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 1.50 ನಿಮಿಷಕ್ಕೆ ಆಗಮಿಸಲಿದೆ. ಹಾಗೂ, ಬೆಂಗಳೂರಿನಿಂದ ವಾಪಸ್ಸು ಮಧ್ಯಾಹ್ನ 2.20 ನಿಮಿಷಕ್ಕೆ ಹೊರಟು ರಾತ್ರಿ 10.40 ನಿಮಿಷಕ್ಕೆ ಬೆಳಗಾವಿಗೆ ತಲುಪಲಿದೆ. ಈ ಮೂಲಕ ಬೆಂಗಳೂರು, ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ ಹಾಗೂ ಬೆಳಗಾವಿಯ ನಡುವೆ ಸಂಪರ್ಕ ಹೆಚ್ಚಿಸಲಿದ್ದು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.