ಬೆಂಗಳೂರು: ಬಿಬಿಎಂಪಿ ಸಾರ್ವಜನಿಕ ಸೇವಾ ವಿಭಾಗಗಳಿಗೆ ಕನ್ನಡ ಭಾಷೆ ಅರಿವು, ಅಭಿಮಾನವುಳ್ಳ ಅಧಿಕಾರಿಗಳನ್ನು ನೇಮಿಸಬೇಕೆಂದು ಪಾಲಿಕೆ ಮುಖ್ಯ ಆಯುಕ್ತರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸೂಚನೆ ನೀಡಿದೆ. ಶನಿವಾರ ಈ ಕುರಿತು ಮುಖ್ಯ ಆಯುಕ್ತರಿಗೆ ಪತ್ರ ಬರೆದಿರುವ ಪ್ರಾಧಿಕಾರದ ಅಧ್ಯಕ್ಷ ಡಾ| ಪುರುಷೋತ್ತಮ ಬಿಳಿಮಲೆ ಅವರು, ಕನ್ನಡಿಗರ ಅಸ್ಮಿತೆಯ ಪ್ರತೀಕವಾಗಬೇಕಾದ ಬಿಬಿಎಂಪಿ ಹಲವು ಕಾರಣಗಳಿಂದ ಕನ್ನಡ ವಿರೋಧಿಯೆಂದು ಸಾರ್ವಜನಿಕ ವಲಯದಲ್ಲಿ ನಕಾರಾತ್ಮಕವಾಗಿ ಪ್ರತಿಬಿಂಬಗೊಳ್ಳುತ್ತಿರುವುದು ವಿಷಾದನೀಯ ಸಂಗತಿ. ಕೂಡಲೇ ಇದನ್ನು ಸರಿಪಡಿಸಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ. ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಅಳವಡಿಸಲಾಗಿರುವ ರಸ್ತೆ ನಾಮಫಲಕಗಳಲ್ಲಿ ತಪ್ಪು ತಪ್ಪಾದ ಕನ್ನಡ ಪದಗಳನ್ನು ಬಳಸಲಾಗುತ್ತಿದೆ. ಇದು ಕೇವಲ ಒಂದು ಪ್ರದೇಶಕ್ಕೆ ಮಾತ್ರ ಸೀಮಿತವಾಗಿಲ್ಲ. ಇಂತಹ ಪ್ರಮಾದಗಳು ಮುಂದುವರೆಯುತ್ತಿವೆ. ಪಾಲಿಕೆಯೇ ಆಯೋಜಿಸುವ ಕಾರ್ಯಕ್ರಮಗಳಲ್ಲಿ ಕನ್ನಡದ ಶೀರ್ಷಿಕೆಗಳು ಕಾಣೆಯಾಗುತ್ತಿರವುದು ವಿಷಾದನೀಯ ಸಂಗತಿ. ಕನ್ನಡದ ಹಿತ ಕಾಯಬೇಕಾದ ಸಂಸ್ಥೆಯಿಂದ ಆಗಬೇಕಾದ ಕೆಲಸಗಳಲ್ಲ ಎಂದಿದ್ದಾರೆ. ಪಾಲಿಕೆಯಿಂದ ಬೀದಿ ನಾಯಿಗಳಿಗೆ ಆಹಾರ ನೀಡುವ ಕುಕುರ್ತಿಹಾರ್ಎನ್ನುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಂಸ್ಕೃತಿಯ ಕುರಿತಾದ ಯಾವುದೇ ಆಲೋಚನೆಗಳು ಪಾಲಿಕೆ ಅಧಿಕಾರಿಗಳಲ್ಲಿ ಸುಳಿಯದೇ ಇರುವುದು ದುರ್ದೈವದ ಸಂಗತಿ. ಇಂತಹ ಪ್ರಮಾದಗಳಿಗೆ ಕಾರಣರಾಗಿರುವ ಅಧಿಕಾರಿಗಳಿಗೆ ಸೂಕ್ತ ಎಚ್ಚರಿಕೆ ನೀಡಬೇಕು. ಮುಂದೆ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು. ಈ ಕುರಿತು ಕೈಗೊಂಡ ಕ್ರಮದ ಬಗ್ಗೆ ಪ್ರಾಧಿಕಾರಕ್ಕೆ ವರದಿಸ ಸಲ್ಲಿಬೇಕೆಂದು ಪಾಲಿಕೆ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.