ಬೆಂಗಳೂರು: ಒಕ್ಕಲಿಗ ಸಮುದಾಯದ ಕುರಿತು ಮುನಿರತ್ನ ನೀಡಿರವ ಹೇಳಿಕೆ ಬಗ್ಗೆ ಸಮುದಾಯದ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು, ನಾಗರೀಕರು ಮಾತನಾಡಬೇಕು. ಅದರ ಬಗ್ಗೆ ಅಶೋಕ್ ಹಾಗೂ ಬಿಜೆಪಿ ನಾಯಕರು ಮಾತನಾಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದರು.
ಅಮೇರಿಕ ಪ್ರವಾಸದಿಂದ ಮರಳಿದ ನಂತರ ಮಾದ್ಯಮಗಳಗೊಂದಿಗೆ ಮಾತನಾಡಿದ ಅವರು, ಶಾಸಕ ಮುನಿರತ್ನ ಅವರು ದಲಿತರು ಮತ್ತು ಒಕ್ಕಲಿಗ ಸಮುದಾಯದ ಬಗ್ಗೆ ಮಾಡಿರುವ ಅವಹೇಳನಕಾರಿ ಮಾತುಗಳ ಬಗ್ಗೆ ಪ್ರತಿಕ್ರಿಯಿಸಿದರು. ದೊಡ್ಡ ದೊಡ್ಡ ನಾಯಕರಿದ್ದಾರೆ, ಅವರು ಮಾತಾಡಬೇಕು. ಇಂತಹ ವಿಚಾರದಲ್ಲಿ ಬಿಜೆಪಿಯವರೇ ಪ್ರತಿಕ್ರಿಯೆ ನೀಡಬೇಕು. ಮುನಿರತ್ನ ಮಾತನಾಡಿರುವುದು ಸರಿಯೋ ತಪ್ಪೋ? ಒಳ್ಳೆಯದೋ, ಕೆಟ್ಟದ್ದೋ ಎಂಬುದನ್ನು ತಿಳಿಸಬೇಕು. ಸರಿಯಿದ್ದರೆ ಸರಿ, ತಪ್ಪಿದ್ದರೆ ತಪ್ಪು ಎಂದು ಹೇಳಬೇಕು ಎಂದು ತಿಳಿಸಿದರು.
ಪೊಲೀಸರ ಬಂಧನಕ್ಕೆ ಮುಂಚಿತವಾಗಿ ನನ್ನ ವಿಚಾರದಲ್ಲಿ ಅಣ್ಣ- ತಮ್ಮಂದಿರ ಆಟ ಶುರುವಾಗಿದೆ ಎನ್ನುವ ಮುನಿರತ್ನ ಹೇಳಿಕೆಗೆ ಉತ್ತರಿಸಿದ ಅವರು, ನನಗೆ ಈ ವಿಚಾರ ಗೊತ್ತೇ ಇಲ್ಲ, ತಿಳಿದು ಮಾತಾಡ್ತೀನಿ. ನನಗೆ ಇನ್ನು ಸರಿಯಾಗಿ ಮಾಹಿತಿ ಗೊತ್ತಿಲ್ಲ. ಸಾಂವಿಧಾನಿಕ ಹುದ್ದೆ ಹೊಂದಿರುವ ಆರ್.ಅಶೋಕ್, ವಿಜಯೇಂದ್ರ, ಮತ್ತು ಕೇಂದ್ರ ಸಚಿವರು ಇದ್ದಾರೆ. ಅವರುಗಳು ದೊಡ್ಡ ನಾಯಕರು ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಬೇಕು” ಎಂದರು.