ಢಾಕಾ: ಪ್ರಧಾನಿ ಶೇಖ್ ಹಸೀನಾ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಪುಂಡರು ಬಾಂಗ್ಲಾದೇಶದಲ್ಲಿರುವ ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿ ವಿಕೃತಿ ಮೆರೆದಿದ್ದಾರೆ. ಅಷ್ಟೇ ಅಲ್ಲದೇ ಭಾರತೀಯ ಸಾಂಸ್ಕೃತಿಕ ಕೇಂದ್ರವನ್ನು ಧ್ವಂಸಗೊಳಿಸಿದ್ದಾರೆ. ಸೋಮವಾರ ನಡೆದ ಹಿಂಸಾಚಾರದಲ್ಲಿ 4 ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಮತ್ತು ಸಮುದಾಯದ ಮುಖಂಡರೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ. ಹಿಂದೂ, ಬೌದ್ಧ, ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ನಾಯಕಿ ಕಾಜೋಲ್ ದೇಬನಾಥ್ ಮಾತನಾಡಿ, ದೇಶಾದ್ಯಂತ ಕನಿಷ್ಠ 4 ಹಿಂದೂ ದೇವಾಲಯಗಳಿಗೆ ಹಾನಿಯಾಗಿದೆ ಎಂಬ ವರದಿಗಳು ಬಂದಿವೆ. ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೆಲವು ಹಿಂದೂ ಸಮಾಜದ ಮುಖಂಡರು ಭಯಭೀತರಾಗಿದ್ದಾರೆ ಎಂದು ಹೇಳಿದರು.


