Top Newsಸುದ್ದಿ

ಭಾರಿ ಮಳೆಗೆ ಬೆಂಗಳೂರು ತತ್ತರ: ಬೆಂಗಳೂರಿನಲ್ಲಿ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಜನರನ್ನು ಹೈರಾಣಾಗಿಸಿದೆ. ಮುಂದಿನ ಎರಡು ದಿನ ಕೂಡ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹವಾಮಾನ ಇಲಾಖೆ ಅಲರ್ಟ್ ಘೋಷಣೆ ಮಾಡಿದೆ.

ಭಾರೀ ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಲಾ ಕಾಲೇಜುಗಳ ಕುರಿತು ಮಹತ್ವದ ಆದೇಶ ಹೊರಡಿಸಲಾಗಿದ್ದು, ಬೆಂಗಳೂರಿನ ಶಾಲೆಗಳಿಗೆ ರಜೆ ಘೋಷಿಸುವ ಕುರಿತು ಡಿಸಿ ಜಗದೀಶ್ ಅವರು ಮಾಹಿತಿ ನೀಡಿದ್ದಾರೆ.

ಬೆಂಗಳೂರಲ್ಲಿ ಮೊನ್ನೆ ರಾತ್ರಿ ಆರಂಭವಾದ ಮಳೆ ನಿನ್ನೆಯೆಲ್ಲ ಸುರಿದು ನಗರದಲ್ಲಿ ಹತ್ತಾರು ಅವಾಂತರಗಳನ್ನ ಸೃಷ್ಟಿ ಮಾಡಿತ್ತು. ನಗರದ ಹಲವೆಡೆ ಜನಜೀವನ ಅಸ್ತವ್ಯಸ್ತ ಮಾಡಿದೆ. ಈ ಮಧ್ಯೆ ಹವಾಮಾನ ಇಲಾಖೆ ಮತ್ತೊಮ್ಮೆ ಎಚ್ಚರಿಕೆಯನ್ನ ನೀಡಿದ್ದು, ನಗರದಲ್ಲಿ ಮತ್ತೆರೆಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಸೆರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದು ಮುಂದಿನ ಎರಡು ದಿನ ಮುಂದುವರೆಯಲಿದ್ದು, ಇಂದು, ನಾಳೆ ರಾಜ್ಯದ್ಯಾಂತ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಉಡುಪಿ, ದಕ್ಷಿಣ ಕನ್ನಡ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರಿನಲ್ಲಿ ಇಂದು, ನಾಳೆ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಬುಧವಾರ ನಗರದ ಪ್ರಾಥಮಿಕ ಮತ್ತು ಫ್ರೌಡ ಶಾಲಾಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. ಅತ್ತ ಐಟಿ ಕಂಪನಿಗಳು ಕೂಡ ಮಳೆಯ ಎಫೆಕ್ಟ್ ಹಿನ್ನೆಲೆ ತಮ್ಮ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಂಗೆ ಅವಕಾಶ ನೀಡಿದ್ದಾರೆ.

ನಗರದ ಮಳೆ ಅವಾಂತರದ ಸಂಬಂಧ ಡಿಸಿಎಂ ಕೆಲ ಮಹತ್ವದ ಸೂಚನೆ ನೀಡಿದ್ದಾರೆ. ಮಳೆ ನೀರು ಮನೆಗಳಿಗೆ ನುಗ್ಗಿ ತೊಂದರೆಯಾದ ಕುಟುಂಬಗಳಿಗೆ ಪಾಲಿಕೆಯಿಂದ 10 ಸಾವಿರ ರೂ. ಶೀಘ್ರ ಪರಿಹಾರ ಬಿಡುಗಡೆಗೆ ಸೂಚನೆ ನೀಡಿದ್ದಾರೆ. ಅಲ್ಲದೆ ಕೂಡಲೇ ಸಮಸ್ಯೆ ಇರುವ ಪ್ರದೇಶಗಳಲ್ಲಿ ಸಮಸ್ಯೆ ಬಗೆಹರಿಸಲು ಸೂಚನೆ ನೀಡಲಾಗಿದೆ. ಪಾಲಿಕೆ ವಾರ್ ರೂಂ 24 ಗಂಟೆ ಕೆಲಸ ಮಾಡುವಂತೆ ಸೂಚಿಸಿದ್ದು, ಮಳೆ ಎದುರಿಸಲು ಬೇಕಾದ ಸಿದ್ಧತೆಗಳನ್ನ ಶೀಘ್ರ ಕಾರ್ಯರೂಪಕ್ಕೆ ತರುವಂತೆ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ.

ಅಲ್ಲದೆ, ಮಳೆ ನೀರು ಸರಾಗವಾಗಿ ಹರಿದುಹೋಗಲು ವ್ಯವಸ್ಥೆ ಇಲ್ಲವಾಗಿದೆ. ಇದರಿಂದಾಗಿ ಮಾನ್ಯತಾ ಟೆಕ್ ಪಾರ್ಕ್ ಅಕ್ಷರಶಃ ಕೆರೆಯಂತಾಗಿದ್ದು, ಮಂಗಳವಾರ ನಾಲ್ಕೈದು ಅಡಿ ಎತ್ತರಕ್ಕೆ ನೀರು ನಿಂತುಕೊಂಡಿತ್ತು. ಅಲ್ಲದೆ ಇಲ್ಲಿ ಕೃತಕ ಜಲಪಾತ ಕೂಡ ಸೃಷ್ಟಿಯಾಗಿತ್ತು.

ಕೃಪಾ ಸಂಘಟನೆ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ

ಮಳೆ ಹಿನ್ನೆಲೆ ನಗರದ ಖಾಸಗಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 16ರಂದು ಕೃಪಾ ಸಂಘಟನೆ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಹವಾಮಾನ ಇಲಾಖೆ ಮುನ್ಸೂಚನೆ ಎಚ್ಚೆತ್ತ ಕೃಪಾ ಖಾಸಗಿ ಸಂಘಟನೆ ಅಕ್ಟೋಬರ್ 16ರಂದು ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ. ಈ ಕುರಿತು ಕೃಪಾ ಖಾಸಗಿ ಶಾಲಾ ಕಾಲೇಜು ಸಂಘಟನೆ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮಾಹಿತಿ ನೀಡಿದ್ದಾರೆ.

Comments (0)

Your email address will not be published. Required fields are marked *

Back to top button