Freedom TV

ಬೆಂಗಳೂರು ಅರಮನೆ ಮೈದಾನದಲ್ಲಿ ಫೆ.26-27 ರಂದು ಬೃಹತ್ ಉದ್ಯೋಗ ಮೇಳ: ಸಚಿವ ಡಾ. ಶರಣಪ್ರಕಾಶ ಪಾಟೀಲ್

ಬೆಂಗಳೂರು : ಯುವಜನರು ಸೇರಿದಂತೆ ಪದವಿ, ಇಂಜನಿಯರಿಂಗ್, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್‌ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಬೃಹತ್ ಯುವ ಸಮೃದ್ಧಿ ಸಮ್ಮೇಳ ಇದೇ ತಿಂಗಳ 26ರಿಂದ ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ ಇಲಾಖೆ ಸಹಭಾಗಿತ್ವದಲ್ಲಿ ನಡೆಯಲಿರುವ ಯುವ ಸಮೃದ್ಧಿ ಸಮ್ಮೇಳನದ ಉದ್ಯೋಗ ಮೇಳ ಕುರಿತು ಬುಧವಾರ ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಹಾಗೂ ಐಟಿ- ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ ಯವರು ಜಂಟಿ ಮಾಧ್ಯಮ ಗೊಷ್ಠಿಯಲ್ಲಿ ಮಾಹಿತಿ ನೀಡಿದರು.

ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮಾತನಾಡಿ, ಇದೇ ತಿಂಗಳ 26 ಮತ್ತು 27ರಂದು ಬೆಂಗಳೂರಿನ ಅರಮನೆಯಲ್ಲಿ ಯುವ ಸಮೃದ್ಧಿ ಸಮ್ಮೇಳನ ಎಂಬ ಹೆಸರಿನಡಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ, ಐಟಿಐ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿರುವ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ಒದಗಿಸಿಕೊಡುವ ಮೇಳ ಇದಾಗಿದೆ ಎಂದು ಹೇಳಿದರು. ಈಗಾಗಲೇ ಈ ಮೇಳಕ್ಕೆ ರಾಜ್ಯಾದ್ಯಂತ ಒಟ್ಟು 31 ಸಾವಿರ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ರಿಜಿಸ್ಟರ್ ಮೂಲಕ ತಮ್ಮ ಹೆಸರುಗಳನ್ನು ನೋಂದಣಿ ಮಾಡಿಕೊಂಡಿದ್ದಾರೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

ಉದ್ಯೋಗ ಮೇಳದಲ್ಲಿ ಅನುಕೂಲ ಕಲ್ಪಿಸುವ ಸದುದ್ದೇಶದಿಂದ 600ಕ್ಕೂ ಹೆಚ್ಚು ಸ್ಟಾಲ್‍ಗಳನ್ನು ಹಾಕಲಾಗಿದೆ. ಅಭ್ಯರ್ಥಿಗಳು ಪ್ರತಿಯೊಂದು ಸ್ಟಾಲಿಗೂ ಭೇಟಿ ನೀಡಿ, ತಮ್ಮ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಎಲ್ಲಿ ಯಾವ ಹುದ್ದೆಗಳು ಖಾಲಿ ಇವೆ ಎಂಬುದರ ಕುರಿತು ಮಾಹಿತಿ ಪಡೆಯಬಹುದು. ಇದಕ್ಕಾಗಿ ಆಯಾ ಕಂಪನಿಗಳ ನುರಿತ ತಜ್ಞರು, ಪರಿಣಿತರು ಇರುತ್ತಾರೆ. ಉದ್ಯೋಗವನ್ನರಸಿ ಬರುವವರಿಗೆ ಸಂಪೂರ್ಣವಾದ ಮಾಹಿತಿ ಲಭ್ಯವಿರಲಿದೆ ಎಂದು ಪಾಟೀಲ್ ಮಾಹಿತಿ ನೀಡಿದರು.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಧಿಕಾರ ಅವಧಿಯಲ್ಲಿ ಬೃಹತ್ ಉದ್ಯೋಗ ಮೇಳವನ್ನು ನಡೆಸಲಾಗಿತ್ತು. ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿನ ಯುವ ಜನತೆಗೆ ಉದ್ಯೋಗ ಒದಗಿಸಿಕೊಡಲು ಉದ್ಯೋಗ ಮೇಳ ಆರಂಭಿಸಬೇಕೆಂದು ಸೂಚನೆ ಕೊಟ್ಟಿದ್ದರು. ಇದು ಬೃಹತ್ ಮೇಳವಾಗಲಿದ್ದು, ಬೇರೆ ಯಾವುದೇ ರಾಜ್ಯದಲ್ಲೂ ಇಂಥ ಮೇಳ ನಡೆಯುವುದಿಲ್ಲ ಎಂದು ಪಾಟೀಲ್ ಮೆಚ್ಚುಗೆ ವ್ಯಕ್ತಪಡಿಸಿದರು.

ಉದ್ಯೋಗ ಮೇಳದಲ್ಲಿ ಹೆಸರು ನೋಂದಣಿ ಮಾಡಿಕೊಂಡವರು ಇಂತಿಂತಹ ಸ್ಟಾಲ್‍ಗಳಿಗೆ ಹೋಗಲು ಅವರಿಗೆ ಪ್ರತ್ಯೇಕ ಮೆಸೇಜ್ ಕಳಿಸಲಾಗುವುದು. ಯಾರೂ ಕೂಡ ತೊಂದರೆ ಅನುಭವಿಸಬಾರದು ಎಂಬ ಕಾರಣಕ್ಕಾಗಿ ನಮ್ಮ ಇಲಾಖೆ ವತಿಯಿಂದಲೇ ಇದನ್ನು ನಿರ್ವಹಣೆ ಮಾಡುತ್ತಿದ್ದೇವೆ. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಉದ್ಯೋಗ ಪಡೆದುಕೊಂಡರೆ ಸಾರ್ಥಕವಾಗುತ್ತದೆ ಎಂದು ಪಾಟೀಲ್ ಸಲಹೆ ಮಾಡಿದರು.ದೇಶದಲ್ಲಿ ದೊಡ್ಡ ಪ್ರಮಾಣದ ಉದ್ಯೋಗ ಮೇಳ ನಡೆದಿದ್ದರೆ ಅದು ನಮ್ಮ ಸರ್ಕಾರದಿಂದ ಮಾತ್ರ. ಇಲ್ಲಿರುವ ಮಾನವ ಸಂಪನ್ಮೂಲ, ಮೂಲ ಸೌಕರ್ಯಗಳು ಸೇರಿದಂತೆ ಹಲವಾರು ಕಾರಣಗಳಿಂದ ದೊಡ್ಡ ದೊಡ್ಡ ಕಂಪನಿಗಳು ಮುಂದೆ ಬಂದಿವೆ. ಯುವಜನತೆ ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಚಿವರಾದ ಪ್ರಿಯಾಂಕ್ ಖರ್ಗೆ ಕರೆ ನೀಡಿದರು.

ನಾವು ಕೇವಲ ಉದ್ಯೋಗ ಮಾತ್ರ ಕೊಡುತ್ತಿಲ್ಲ. ಅವರ ಸ್ಕಿಲ್ ಗ್ಯಾಪ್‍ಗಳನ್ನು ಸರಿಮಾಡಲು ನಾವು ಸೆಂಟರ್‌ ಗಳನ್ನು ಮಾಡಿಕೊಂಡಿದ್ದೇವೆ. ಇಲ್ಲಿ ನೋಂದಣಿ ಮಾಡಿಕೊಂಡವರನ್ನು ಟ್ರ್ಯಾಕ್ ಮಾಡಿ ಉದ್ಯೋಗ ಕೊಡಿಸುವ ಪ್ರಯತ್ನ ಮಾಡುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದರು.ದೇಶದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರವಾಗಿದ್ದು, ಪ್ರಧಾನಿ ಮಂತ್ರಿಗಳು 20 ಕೋಟಿ ಉದ್ಯೋಗ ಕೊಡುತ್ತೇವೆ ಎಂದಿದ್ದರು. ಯಾವ ಉದ್ಯೋಗವನ್ನೂ ನೀಡಿಲ್ಲ. ಸುಮಾರು 40 ಸಾವಿರ ಉದ್ಯೋಗಗಳನ್ನು ನಾವು ಕಳೆದುಕೊಂಡಿದ್ದೇವೆ. ಎನ್‍ಎಸ್ ಓ ಸರ್ವೆ ಗಳಿಂದ ಬಂದಿರುವ ಮಾಹಿತಿ ಇದು. ಈ ವರದಿ ಬಂದ ಮೇಲೆ ಎನ್‍ಎಸ್‍ಓ ಸರ್ವೆಗಳು ನಿಲ್ಲಿಸಿಬಿಟ್ಟರು. ಯುಪಿಎ ಸರ್ಕಾರ 10 ಸಾವಿರ ಐಟಿಗಳನ್ನು ಸ್ಥಾಪನೆ ಮಾಡಿತ್ತು ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಉಚಿತ ಬಸ್ ವ್ಯವಸ್ಥೆ

ಉದ್ಯೋಗ ಮೇಳಕ್ಕಾಗಿ ರಾಜ್ಯದ ವಿವಿಧ ಭಾಗಗಳಿಂದ ಬರುವ ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಸಲು ಮೆಜೆಸ್ಟಿಕ್ ರೈಲ್ವೆ ಹಾಗು ಬಸ್ ನಿಲ್ದಾಣಗಳಿಂದ ಮತ್ತು ಶಾಂತಿ ನಗರ ಬಸ್ ನಿಲ್ದಾಣದಿಂದ ಉಚಿತ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಉದ್ಯೋಗ ಮೇಳಕ್ಕಾಗಿ ವಿಶೇಷ ಬಸ್‍ಗಳು ಬರಲಿವೆ.

Comments (0)

Your email address will not be published. Required fields are marked *

Back to top button