ಬಳ್ಳಾರಿ: ನವೆಂಬರ್ 9 ರಿಂದ ವರದಿಯಾದ ಐದು ಬಾಣಂತಿಯರ ಸರಣಿ ಸಾವು ಪ್ರಕರಣ ರಾಜ್ಯದಲ್ಲಿ ಆತಂಕವನ್ನು ಮೂಡಿಸಿದ್ದು, ಸರ್ಕಾರದ ವಿರುದ್ಧ ಜನರು ಹಾಗೂ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಇದರ ಬೆನ್ನಲ್ಲೇ ಬಿಮ್ಸ್ ಆಸ್ಪತ್ರೆ ಹಾಗೂ ಜಿಲ್ಲಾ ಔಷಧಿ ಉಗ್ರಾಣಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಶನಿವಾರ ದಿಢೀರ್ ದಾಳಿ ನಡೆಸಿದ್ದು, ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದೆ.
ಜಿಲ್ಲಾ ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದ ತಂಡ ಜಿಲ್ಲಾಸ್ಪತ್ರೆಗೆ, ಬಿಮ್ಸ್ ಆಸ್ಪತ್ರೆಗೆ ಲೋಕಾಯಕ್ತ ಡಿವೈಎಸ್ಪಿ ವಸಂತಕುಮಾರ್ ಹಾಗೂ ಸಿಪಿಐ ಮೊಹಮ್ಮದ್ ರಫೀಕ್ ನೇತೃತ್ವದ ತಂಡದ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ಮಾಡಿದರು.
ದಾಳಿ ವೇಲೆ ಅಧಿಕಾರಿಗಳು ಬಾಣಂತಿಯರ ಸಾವಿನ ಪ್ರಕರಣದ ದಾಖಲೆ ಪರಿಶೀಲಿಸಿ ಅವುಗಳನ್ನು ವಶಕ್ಕ ಪಡೆದುಕೊಂಡಿದ್ದಾರೆ. ಜೊತೆಗೆ ಬಾಣಂತಿಯರಿಗೆ ನೀಡಿರುವ ಔಷಧಿಯೂ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಅನೇಕ ದಾಖಲೆಗಳನ್ನು ಕೂಡ ಲೋಕಾಯುಕ್ತ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ, ಅಲ್ಲದೆ, ಬಾಣಂತಿಯರ ಸಾವಿಗೆ ಕಾರಣವಾಗಿದೆ ಎಂದು ಆರೋಪಿಸಲದ ನಿರ್ದಿಷ್ಟ ಬ್ಯಾಚ್’ನ ಔಷಧಿ (ರಿಂಗರ್ ಲ್ಯಾಕ್ಟೇಟ್ ದ್ರಾವಣ) ಸ್ಯಾಂಪಲ್ ಗಳನ್ನೂ ಕೂಡ ಅಧಿಕಾರಿಗಳು ಸಂಗ್ರಹಿಸಿದ್ದಾರೆ.
ಸ್ವಯಂ ಪ್ರೇರಿತ ಪ್ರಕರಣ ದಾಖಲು
ಲೋಕಾಯುಕ್ತ ಸಂಸ್ಥೆಯ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರಿಗೆ ಪ್ರತ್ಯೇಖವಾಗಿ ಸರ್ಚ್ ವಾರೆಂಟ್ಗಳನ್ನು ನೀಡಿ, ಬಳ್ಳಾರಿ ಜಿಲ್ಲಾಸ್ಪತ್ರೆ ಹಾಗೂ ಔಷಧ ಉಗ್ರಾಣವನ್ನು ತಪಾಸಣೆ ಮಾಡಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಅಲ್ಲದೇ, ಈ ರೀತಿಯ ಘಟನೆಗಳು ಬೇರೆ ಯಾವುದಾದರೂ ಜಿಲ್ಲೆಯಲ್ಲಿಯೂ ಸಹಾ ಜರುಗಿರಬಹುದಾದ ಸಂಭವವಿರುವುದರಿಂದ, ಆ ಜಿಲ್ಲೆಗಳಲ್ಲಿ ಸದ್ಯ ಔಷಧಿ ಸರಬರಾಜು ಮಾಡಿರುವ ಬಗ್ಗೆ ಮಾಹಿತಿ ನೀಡುವಂತೆ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವೈದ್ಯಾಧಿಕಾರಿಗಳಿಗೆ ಲೋಕಾಯುಕ್ತರು ಆದೇಶಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಔಷಧ ನಿಯಂತ್ರಕರು ಹಾಗೂ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಬಳ್ಳಾರಿ ಸರ್ಕಾರಿ ಆಸ್ಪತ್ರೆಯ ಹಿರಿಯ ಅಧಿಕಾರಿಗಳು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.