ಗುತ್ತಿಗೆ ಕಾಮಗಾರಿಯ ಬದಲಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಿರಹಟ್ಟಿಯ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದು, ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ.
ಸಣ್ಣನೀರಾವರಿ ಇಲಾಖೆಯ ರಸ್ತೆ ಬದಿ ತಡೆಗೋಡೆ ನಿರ್ಮಾಣ ಕಾಮಗಾರಿಯ ಗುತ್ತಿಗೆ ನೀಡಲು ಶಾಸಕರು ಒಟ್ಟು 11 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದ್ದು, ಮೊದಲ ಕಂತಾಗಿ 5 ಲಕ್ಷ ರೂಪಾಯಿ ಪಡೆಯುವಾಗ ಕಾರ್ಯಾಚರಣೆ ನಡೆದಿದೆ.

ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡವು ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಶಾಸಕರಿಗೆ ಸೇರಿದ ಬಾಲಾಜಿ ಆಸ್ಪತ್ರೆಯ ಮೇಲೆ ದಾಳಿ ನಡೆಸಿದೆ. ಈ ವೇಳೆ ಗುತ್ತಿಗೆದಾರ ವಿಜಯ ಪೂಜಾರ ಅವರಿಂದ ಹಣ ಪಡೆಯುತ್ತಿದ್ದ ಶಾಸಕ ಚಂದ್ರು ಲಮಾಣಿ, ಅವರ ಸರ್ಕಾರಿ ಪಿಎ ಮಂಜುನಾಥ ವಾಲ್ಮೀಕಿ ಮತ್ತು ಖಾಸಗಿ ಪಿಎ ಗುರು ಲಮಾಣಿ ಅವರನ್ನು ರೆಡ್ಹ್ಯಾಂಡ್ ಆಗಿ ಹಿಡಿಯಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ಕಂತೆ ಕಂತೆ ಹಣವನ್ನು ವಶಪಡಿಸಿಕೊಂಡಿದ್ದು, ಮೂವರನ್ನೂ ಬಂಧಿಸಿ ವಿಚಾರಣೆಗಾಗಿ ಕರೆದೊಯ್ದಿದ್ದಾರೆ.


