ಬೆಂಗಳೂರು: ವಿಜಯೇಂದ್ರ ವಿರುದ್ಧ ಬಹಿರಂಗವಾಗಿಯೇ ಆರೋಪ ಮಾಡುತ್ತಿದ್ದ ಯತ್ನಾಳ್ಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. ಇದರ ಬೆನ್ನಲ್ಲೇ ಯತ್ನಾಳ್, ಇಂದು ನವದೆಹಲಿಯಲ್ಲಿ ಶಿಸ್ತು ಸಮಿತಿ ಮುಂದೆ ಹಾಜರಾಗಿ ಕರ್ನಾಟಕ ಬಿಜೆಪಿಯಲ್ಲಿನ ಬೆಳವಣಿಗೆಗಳನ್ನು ಬಿಚ್ಚಿಟ್ಟಿದ್ದಾರೆ. ಇದರ ಮಧ್ಯ ಇತ್ತ ಯಡಿಯೂರಪ್ಪ ಮಾತನಾಡಿ, ಯತ್ನಾಳ್ ಹೊರಗಿನವರಲ್ಲ, ನಮ್ಮವರೇ. ಯಾವುದೋ ಕಾರಣಕ್ಕೆ ಅವರು ಹಾಗೆ ಮಾತನಾಡುತ್ತಿದ್ದಾರೆ. ಈ ಬೆಳವಣಿಗೆ ನೋಡಿದರೆ ಯತ್ನಾಳ್ ಹಾಗೂ ವಿಜಯೇಂದ್ರ ಬಣ ರಾಜಕೀಯ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಂತಿದೆ.
ಶಿವಮೊಗ್ಗದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು. ಯತ್ನಾಳ್ ಹೊರಗಿನವರಲ್ಲ, ನಮ್ಮವರೇ. ಯಾವುದೋ ಕಾರಣಕ್ಕೆ ಅವರು ಹಾಗೆ ಮಾತನಾಡುತ್ತಿದ್ದಾರೆ. ಎಲ್ಲವನ್ನೂ ಹೈ ಕಮಾಂಡ್ ಕೂತು ಬಗೆಹರಿಸುತ್ತದೆ. ಬರುವ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯದ ವಿರುದ್ಧ ನಮ್ಮ ಶಾಸಕರು ಜಾಗೃತಿ ಮೂಡಿಸಲಿದ್ದಾರೆ ಎಂದ್ರು.
ಇನ್ನು ಬಸನಗೌಡ ಪಾಟೀಲ್ ಯತ್ನಾಳ್ ಬಂಡಾಯ ಪಕ್ಷಕ್ಕೆ ಹಾನಿಯಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲರೂ ಒಟ್ಟಾಗಿ ಪಕ್ಷವನ್ನು ಮುಂದೆ ತೆಗೆದುಕೊಂಡು ಹೋಗುತ್ತೇವೆ. ಏನೇ ಭಿನ್ನಾಭಿಪ್ರಾಯವಿದ್ದರೂ ಕೂತು ಚರ್ಚಿಸಿ ಬಗೆಹರಿಸಿಕೊಳ್ಳುತ್ತೇವೆ. ಎಲ್ಲವೂ ಸರಿಯಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅತ್ತ ದೆಹಲಿಯಲ್ಲಿ ಬೀಡುಬಿಟ್ಟಿರುವ ಯತ್ನಾಳ್, ಯತ್ನಾಳ್ ಹೊರಗಿನವರಲ್ಲ, ನಮ್ಮವರೇ ಎನ್ನುವ ಯಡಿಯೂರಪ್ಪನವರ ಹೇಳಿಕೆಯನ್ನು ಸ್ವಾಗತ ಮಾಡಿದ್ದಾರೆ. ಇಷ್ಟು ದಿನ ಯಡಿಯೂರಪ್ಪ ಕುಟುಂಬದ ವಿರುದ್ಧ ನನ್ನ ಹೋರಾಟ ಎನ್ನುತ್ತಿದ್ದ ಯತ್ನಾಳ್, ಇದೀಗ ಏಕಾಏಕಿ ಬಿಎಸ್ವೈ ಮೇಲೆ ಸಾಫ್ಟ್ ಕಾರ್ನರ್ ಆಗಿ ಮಾತನಾಡಿದ್ರು.
ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಮುಂದೆ ಸ್ಪಷ್ಟನೆ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಯತ್ನಾಳ್, ಈಗಾಗಲೇ ವಿಜಯೇಂದ್ರ ಮತ್ತು ಯತ್ನಾಳ್ ಬಣದ ನಡುವೆ ಹಾದಿ ರಂಪ ಬೀದಿ ರಂಪ ಆಗ್ತಿರುವಾಗಲೇ ಮತ್ತೊಂದು ಬಣ ಇದನ್ನ ಬಣ ಅಂತಾ ಹೇಳೋಕೆ ಆಗದೇ ಇದ್ರೂ, ಎರಡು ಬಣಗಳನ್ನ ಖಂಡಿಸುವ ತಟಸ್ಥನ ನಿಲುವಿನ ನಾಯಕರು ಮತ್ತೊಂದು ಕಡೆ ಇದ್ದಾರೆ. ಈ ತಟಸ್ಥ ಬಣದಲ್ಲಿ ಗುರುತಿಸಿಕೊಂಡಿರುವ ಡಿ.ವಿ.ಸದಾನಂದಗೌಡರು ಮೊನ್ನೆಯಷ್ಟೇ ಯತ್ನಾಳ್ ವಿರುದ್ಧ ಗುಡುಗಿದ್ರು. ಇದೀಗ ವಿಜಯೇಂದ್ರ ಪರ ರೇಣುಕಾಚಾರ್ಯ ಟೀಂ ನಡೆಸ್ತಿರುವ ಸಭೆಗೂ ಈ ತಟಸ್ಥ ಬಣ ಆಕ್ಷೇಪ ವ್ಯಕ್ತಪಡಿಸಿದೆ.
1 ಗಂಟೆ 15 ನಿಮಿಷ ಕಾಲ ಎಲ್ಲ ಸವಿಸ್ತಾರವಾಗಿ ಹೇಳಿದ್ದಾನೆ. ನಾನು ಹೇಳಿರುವ ಎಲ್ಲವನ್ನೂ ಸ್ವೀಕರಿಸಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಎಲ್ಲ ತೀರ್ಮಾನಗಳನ್ನು ತೆಗೆದುಕೊಳ್ತಾರೆ. ವಕ್ಫ್ ಬೋರ್ಡ್ ವಿರುದ್ಧದ ಹೋರಾಟಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದು, ಪಕ್ಷದ ಸಂಘಟನೆಯಿಂದ ಕೆಲಸ ಮಾಡಿ ಎಂದು ಹೇಳಿದ್ದಾರೆ. ನಿಮ್ಮ ಭಾವನೆಗಳನ್ನು ನಾಯಕರ ಗಮನಕ್ಕೆ ತರುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.
ಇನ್ನು ಇದೇ ವೇಳೆ ಯತ್ನಾಳ್ ನಮ್ಮವರೇ ಎಂದು ಬಿಎಸ್ವೈ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪನವರ ಹೇಳಿಕೆ ಸ್ವಾಗತಿಸುತ್ತೇನೆ. ನಿಮಗೆ ಭವಿಷ್ಯ ಇದೆ. ಶಾಂತ ಸ್ವಭಾವದಿಂದ ಇರಲು ಹೇಳಿದ್ದಾರೆ. ವಿಷಯವಾರು ಮಾತ್ರ ಮಾತನಾಡುವಂತೆ ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು. ಇದರೊಂದಿಗೆ ಶಿಸ್ತು ಸಮಿತಿ ಮುಂದೆ ಹಾಜರಾಗಿ ಬಂದ ಮೇಲೆ ಯತ್ನಾಳ್ ಶಾಂತವಾದ್ರಾ? ಯಡಿಯೂರಪ್ಪನವರ ಕುಟುಂಬದ ಬಗ್ಗೆ ಬಹಿರಂಗ ಆರೋಪಗಳನ್ನು ಮಾಡುವುದನ್ನು ನಿಲ್ಲಿಸುತ್ತಾರಾ? ಬಿಜೆಪಿ ಶಿಸ್ತು ಸಮಿತಿ ಯತ್ನಾಳ್ಗೆ ಬುದ್ಧಿ ಹೇಳಿ ಕಳಿಸಿದ್ಯಾ? ಹೀಗೆ ಹತ್ತಾರ ಪ್ರಶ್ನೆಗಳು ಉದ್ಭವಿಸಿವೆ.