ಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆ ಬೆಂಗಳೂರು ನಗರದಾದ್ಯಂತ ಫೆಬ್ರವರಿ 15ರಂದು ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ. ಹಬ್ಬದ ಪವಿತ್ರತೆಯನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ನಗರದ ಎಲ್ಲ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳು ಕಡ್ಡಾಯವಾಗಿ ಮುಚ್ಚಲ್ಪಟ್ಟಿರುತ್ತವೆ.

ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ಯಾವುದೇ ಮಾರಾಟ ಮಳಿಗೆಗಳಲ್ಲಿ ಮಾಂಸ ಉತ್ಪನ್ನಗಳ ಮಾರಾಟ ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಮತ್ತು ವ್ಯಾಪಾರಿಗಳು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಪ್ರತಿ ವರ್ಷವೂ ಪ್ರಮುಖ ಹಬ್ಬಗಳ ಸಂದರ್ಭದಲ್ಲಿ ಇಂತಹ ನಿಷೇಧವನ್ನು ಜಾರಿಗೊಳಿಸಲಾಗುತ್ತದೆ. ಈ ಬಾರಿ ಮಹಾಶಿವರಾತ್ರಿಯು ಫೆಬ್ರವರಿ 15ರಂದು ಬಂದಿರುವುದರಿಂದ, ಅಂದು ಮಾಂಸಾಹಾರಿ ಪ್ರಿಯರಿಗೆ ಹಾಗೂ ಮಾಂಸದ ವ್ಯಾಪಾರಿಗಳಿಗೆ ಬಿಡುವು ಸಿಕ್ಕಂತಾಗಿದೆ. ನಾಗರಿಕರು ಈ ಆದೇಶಕ್ಕೆ ಸಹಕರಿಸಬೇಕು ಎಂದು ಪ್ರಾಧಿಕಾರವು ಮನವಿ ಮಾಡಿದೆ.


