ರಾಜ್ಯ ಸರ್ಕಾರಕ್ಕೆ ಮಾರ್ಚ್ ತಿಂಗಳಲ್ಲಿ ಪ್ರತಿಭಟನೆಗಳ ಬಿಸಿ ಜೋರಾಗಿ ತಟ್ಟಲಿದೆ. ವಿವಿಧ ಇಲಾಖೆಗಳ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಬೀದಿಗಿಳಿಯಲು ನಿರ್ಧರಿಸಿದ್ದು, ಸಾಮಾನ್ಯ ಜನರ ಜೀವನದ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆಯಿದೆ.
ವೇತನ ಪರಿಷ್ಕರಣೆ ಮತ್ತು 38 ತಿಂಗಳ ಹಿಂಬಾಕಿ ಪಾವತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯು ಮಾರ್ಚ್ 2 ರಂದು ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಳಿಸಲು ನಿರ್ಧರಿಸಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಸಮಿತಿಯು, ಬಿಡುಗಡೆಯಾಗಿರುವ ₹1,271 ಕೋಟಿ ಹಣವನ್ನು ತಕ್ಷಣವೇ ವಿತರಿಸಬೇಕು ಮತ್ತು ಒಟ್ಟು ₹521 ಕೋಟಿ ಅರಿಯರ್ಸ್ ನೀಡಬೇಕು ಎಂದು ಒತ್ತಾಯಿಸಿದೆ. ಅಲ್ಲದೆ, ಹಳೆಯ ಮುಷ್ಕರಗಳ ಸಂದರ್ಭದಲ್ಲಿ ನೌಕರರ ಮೇಲೆ ಕೈಗೊಂಡಿದ್ದ ಶಿಸ್ತು ಕ್ರಮಗಳನ್ನು ಕೈಬಿಡಬೇಕು ಎಂಬುದು ಇವರ ಪ್ರಮುಖ ಬೇಡಿಕೆಯಾಗಿದೆ.
ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ವೈದ್ಯಾಧಿಕಾರಿಗಳ ಸಂಘವು ಮಾರ್ಚ್ 11 ರಿಂದ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದಾಗಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರರೋಗಿ ವಿಭಾಗದ ಸೇವೆ ವ್ಯತ್ಯಯವಾಗುವ ಭೀತಿ ಎದುರಾಗಿದೆ. ಔಷಧಿಗಳ ಸಮರ್ಪಕ ಸರಬರಾಜು, ಕಳೆದ 5 ವರ್ಷಗಳಿಂದ ಬಾಕಿ ಇರುವ ಮುಂಬಡ್ತಿ ನೀಡುವುದು, ಖಾಲಿ ಇರುವ ಹುದ್ದೆಗಳ ಭರ್ತಿ ಹಾಗೂ ಪ್ರತಿ ತಿಂಗಳ ಮೊದಲ ವಾರದಲ್ಲೇ ವೇತನ ಪಾವತಿಸುವಂತೆ ವೈದ್ಯರು ಆಗ್ರಹಿಸಿದ್ದಾರೆ. ಇದರ ಜೊತೆಗೆ ಗುತ್ತಿಗೆದಾರರು ಕೂಡ ₹37,000 ಕೋಟಿ ಬಾಕಿ ಬಿಲ್ ಪಾವತಿಗೆ ಒತ್ತಾಯಿಸಿ ಪ್ರತಿಭಟನೆಯಲ್ಲಿ ಕೈಜೋಡಿಸುತ್ತಿದ್ದಾರೆ.


