
ವಿಜಯಪುರ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನವನ್ನು ಅರ್ಪಿಸಿದರು.
ಕಾರ್ಯಕ್ರಮದಲ್ಲಿ ಸಚಿವರಾದ ಶಿವಾನಂದ ಪಾಟೀಲ, ಎಂ.ಬಿ. ಪಾಟೀಲ, ಆರ್.ಬಿ. ತಿಮ್ಮಾಪುರ, ಶಾಸಕರಾದ ಎಚ್.ವೈ. ಮೇಟಿ, ಯಶವಂತರಾಯಗೌಡ ಪಾಟೀಲ, ಜೆ.ಟಿ.ಪಾಟೀಲ, ವಿಜಯಾನಂದ ಕಾಶಪ್ಪನವರ, ಭೀಮಸೇನ ಚಿಮ್ಮನಕಟ್ಟಿ, ಅಶೋಕ ಮನಗೂಳಿ, ಸಂಗಮೇಶ ಬಬಲೇಶ್ವರ ಮತ್ತೀತರರು ಇದ್ದರು. ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಇಲಾಖೆಯ ಆಯುಕ್ತ ಮೊಹಮ್ಮದ್ ಮೊಹಸಿನ್, ಕೆಬಿಜೆಎನ್ಎಎಲ್ ಎಂ.ಡಿ. ಕೆ.ಪಿ.ಮೋಹನರಾಜ್, ಬಿಟಿಡಿಎ ಮುಖ್ಯ ಎಂಜಿನಿಯರ್ ಡಿ.ಬಸವರಾಜ ಮತ್ತೀತರರು ಇದ್ದರು.
ಬಾಗಿನವನ್ನು ಅರ್ಪಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ರೈತ ಹೋರಾಟಗಾರರೊಂದಿಗೆ ಹಿಂದೆಯೇ ಬೆಳಗಾವಿಯಲ್ಲಿ ಸಭೆ ನಡೆಸಿತ್ತು. ಅಲ್ಲಿ ಎಲ್ಲರೂ ಒಪ್ಪಿಗೆ ನೀಡಿ ಎಂದಿರುವ ಹಿನ್ನೆಲೆಯಲ್ಲಿ ಸರ್ಕಾರವೂ ಒಪ್ಪಿಕೊಂಡಿದೆ. ಉಪಮುಖ್ಯಮಂತ್ರಿಗಳು ಇತ್ತೀಚೆಗೆ ಈ ಭಾಗದ ರೈತರು, ಶಾಸಕರೊಂದಿಗೆ ಸಭೆ ಕರೆದು ಚರ್ಚಿಸಿದ್ದು, ಒಪ್ಪಿಗೆ ಆದೇಶ ನೀಡುವುದು ಒಂದು ಹಂತಕ್ಕೆ ಬಂದಿದೆ. ಎಲ್ಲರ ಒಪ್ಪಿಗೆಯ ಮೇಲೆ ಒಪ್ಪಂದ ಮಾಡಿಕೊಳ್ಳಲಾಗುವುದು. ಮುಂದಿನ ವಾರದೊಳಗೆ ಈ ಬಗ್ಗೆ ಇತ್ಯರ್ಥ ಮಾಡಲಾಗುವುದು ಎಂದರು.




