ಪ್ರಜಾಸೇವೆ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ!
CM D.K. Shivakumar launches the 'Prajaseve' campaign!

ವಿಜಯನಗರ : ರಾಜ್ಯದ ಜನಸಾಮಾನ್ಯರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ತ್ವರಿತವಾಗಿ ಪರಿಹಾರ ಒದಗಿಸುವ ಮಹತ್ವಾಕಾಂಕ್ಷೆಯ ‘ಪ್ರಜಾಸೇವೆ ಅಭಿಯಾನ’ಕ್ಕೆ ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕೃತ ಚಾಲನೆ ನೀಡಿದರು.
“ಅಹವಾಲು ನಿಮ್ಮದು, ಪರಿಹಾರ ನಮ್ಮದು” ಎಂಬ ಮಹತ್ವದ ಘೋಷವಾಕ್ಯದೊಂದಿಗೆ ಇಂದಿನಿಂದ ರಾಜ್ಯಾದ್ಯಂತ ಈ ವಿನೂತನ ಅಭಿಯಾನ ಹಾಗೂ ಪ್ರಜಾಸೇವೆ ಇಲಾಖೆಯ ಕಾರ್ಯಕ್ರಮಗಳು ಅನುಷ್ಠಾನಕ್ಕೆ ಬಂದಿವೆ. ಇನ್ನು ಮುಂದೆ ಪ್ರತಿ ತಿಂಗಳ ಮೊದಲ ಶನಿವಾರ ಮತ್ತು ಮೂರನೇ ಶನಿವಾರದಂದು ನಿಯಮಿತವಾಗಿ ಸಭೆಗಳು ಜರುಗಲಿವೆ. ಜಿಲ್ಲಾ, ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪ್ರತ್ಯೇಕ ಸಭೆಗಳನ್ನು ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲಾಗುತ್ತದೆ.
ಆಯಾ ಕ್ಷೇತ್ರದ ಸಚಿವರು ಮತ್ತು ಶಾಸಕರ ನೇತೃತ್ವ ಹಾಗೂ ಅಧ್ಯಕ್ಷತೆಯಲ್ಲಿ ಈ ಸಭೆಗಳು ನಡೆಯಲಿದ್ದು, ಸಾರ್ವಜನಿಕರಿಂದ ನೇರವಾಗಿ ಅರ್ಜಿ ಹಾಗೂ ಅಹವಾಲುಗಳನ್ನು ಸ್ವೀಕರಿಸಲಾಗುತ್ತದೆ. ಸಭೆಗಳಲ್ಲಿ ಸ್ವೀಕರಿಸಲಾಗುವ ಅರ್ಹ ಅರ್ಜಿಗಳನ್ನು ಪರಿಶೀಲಿಸಿ, ನಿಗದಿತ ಅವಧಿಯೊಳಗೆ ಸೂಕ್ತ ಪರಿಹಾರ ಒದಗಿಸಲು ಸರ್ಕಾರ ನಿರ್ಧರಿಸಿದೆ.




