Top Newsರಾಜಕೀಯರಾಜ್ಯಸುದ್ದಿ

CT Ravi Case: ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ರಾಜ್ಯ ಸರ್ಕಾರ!

ಹುಬ್ಬಳ್ಳಿ: ಮಾಜಿ ಸಚಿವ, ಎಂಎಲ್​ಸಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣ ದೇಶಾದ್ಯಂತ ಸದ್ದು ಮಾಡಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಪರಮೇಶ್ವರ, ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ನಿರ್ಧಾರ ಮಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಅಲ್ಲದೇ ಪ್ರಕರಣವು ವಿಚಾರಣೆ ಹಂತದಲ್ಲಿರುವಾಗ ಅದರ ಕುರಿತು ಪ್ರತಿಕ್ರಿಯೆ ನೀಡುವುದು ಉಚಿತವಲ್ಲ ಎಂದೂ ಗೃಹ ಸಚಿವರು ನುಡಿದರು.

“ಸಿಟಿ ರವಿ ಪ್ರಕರಣದ ತನಿಖೆ ಈಗಷ್ಟೇ ಆರಂಭವಾಗಬೇಕಿದೆ. ವಿಚಾರಣೆ ಹಂತದಲ್ಲಿರುವ ಪ್ರಕರಣದ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವುದು ತಪ್ಪು. ಪೊಲೀಸರು ತಮ್ಮ ಕರ್ತವ್ಯವನ್ನು ಮಾಡಲಿದ್ದು, ವಿಧಾನಪರಿಷತ್‌ ಸಭಾಪತಿ ಕೂಡ ತಮ್ಮ ಕರ್ತವ್ಯವನ್ನು ನಿರ್ವಹಿಸಲಿದ್ದಾರೆ. ನಾವು ಸಾಕ್ಷಿಗಳನ್ನು ಪರಿಶೀಲಿಸಬೇಕಾಗಿರುವುದರಿಂದ ಪ್ರಕರಣದ ಎಫ್‌ಐಆರ್‌ ದಾಖಲಿಸುವುದು ವಿಳಂಬವಾಗಲಿದೆ..” ಎಂದೂ ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.

ಸಿಟಿ ರವಿ ಪ್ರಕರಣ ಸಾಕಷ್ಟು ಸೂಕ್ಷ್ಮತೆಯನ್ನು ಒಳಗೊಂಡಿದ್ದು, ಎಲ್ಲಾ ಸಾಕ್ಷ್ಯಾಧಾರಗಳನ್ನು ಪೊಲೀಸರು ಕುಲಂಕೂಷವಾಗಿ ಪರಿಶೀಲನೆ ನಡೆಸಬೇಕಾಗುತ್ತದೆ. ಹೀಗಾಗಿ ತರಾತುರಿಯಲ್ಲಿ ಎಫ್‌ಐಆರ್‌ ದಾಖಲಿಸುವುದು ಸೂಕ್ತವಲ್ಲ ಎಂಬ ತೀರ್ಮಾನಕ್ಕೆ ಬರಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ಅತ್ಯಂತ ಜಾಗರೂಕರಾಗಿ ಹೆಜ್ಜೆ ಇಡಲಿದ್ದಾರೆ..” ಎಂದು ಪರಮೇಶ್ವರ ತಿಳಿಸಿದರು.

ಇನ್ನು ಸ್ಪೀಕರ್‌ ಅನುಮತಿ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್‌, ಸಭಾಪತಿ ಅವರು ತಮ್ಮ ಕರ್ತವ್ಯವನ್ನು ನಿರ್ವಹಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ತನಿಖೆಗೆ ಎಲ್ಲಾ ರೀತಿಯ ಸಹಕಾರ ದೊರೆಯಲಿದೆ ಎಂಬ ಭರವಸೆ ಇರುವುದಾಗಿ ಗೃಹ ಸಚಿವರು ನುಡಿದರು. “ಸಿಟಿ ರವಿ ಪ್ರಕರಣ ಮುಗಿದ ಅಧ್ಯಾಯ..” ಎಂಬ ಸಭಾಪತಿ ಬಸವರಾಜ ಹೊರಟ್ಟಿ ಅವರ ಹೇಳಿಕೆಗೆ ತಾವು ಪ್ರತಿಕ್ರಿಯೆ ನೀಡುವುದಿಲ್ಲ ಎಂದೂ ಡಾ.ಜಿ. ಪರಮೇಶ್ವರ ಸ್ಪಷ್ಟಪಡಿಸಿದರು.

Comments (0)

Your email address will not be published. Required fields are marked *

Back to top button