ರಾಜಕೀಯರಾಜ್ಯ

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ ಎಂದ ಡಿಸಿಎಂ ಡಿಕೆಶಿ

ದೆಹಲಿ: ನ್ಯಾಷನಲ್​​​ ಹೆರಾಲ್ಡ್​​ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್​ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್​ ಹೇಳಿದ್ದಾರೆ..

ಸೋಮವಾರ ದೆಹಲಿ ಪೊಲೀಸರಿಗೆ ಉತ್ತರ ನೀಡಲು ನಿರ್ಧರಿಸಿದ್ದೆ. ಆದರೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳುತ್ತಿದ್ದು, ಅಧಿವೇಶನ ಮುಗಿದ ಬಳಿಕ ಉತ್ತರ ನೀಡಲು ಕಾಲಾವಕಾಶ ಕೇಳುತ್ತೇನೆ ಎಂದು ತಿಳಿಸಿದರು.

ಪೊಲೀಸರು ನೀಡಿರುವ ನೋಟಿಸ್ ಗೆ ನನ್ನ ಉತ್ತರದ ಪ್ರತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತೇನೆ. ಏಕೆಂದರೆ ಅವರು ಎಫ್ಐಆರ್ ಪ್ರತಿಯನ್ನು ಲಗತ್ತಿಸಿಲ್ಲ. ಇ.ಡಿ.ಗೆ ಈಗಾಗಲೇ ಉತ್ತರ ನೀಡಿದ್ದೇವೆ. ಎಫ್ಐಆರ್ ಪ್ರತಿಯಲ್ಲಿ ಏನಿದೆ ಎಂದು ಓದಿಲ್ಲ. ಕೇವಲ ನೋಟಿಸ್ ಮಾತ್ರ ನೀಡಿದ್ದಾರೆ. ಎಫ್ಐಅರ್ ಪ್ರತಿ ನೀಡಿ ಎಂದು ಕೇಳುತ್ತೇನೆ ಎಂದು ತಿಳಿಸಿದರು.

ನಾನು ದೆಹಲಿಗೆ ಬಂದಾಗ ಎಲ್ಲರನ್ನೂ ಭೇಟಿ ಮಾಡಬೇಕು. ಸುರ್ಜೆವಾಲ, ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಬೇಕು. ನಿನ್ನೆ ಇಂದಿರಾ ಭವನದಲ್ಲಿ ನಡೆದ ಭೋಜನ ಕೂಟದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನೂ ಭೇಟಿ ಮಾಡಿದ್ದೆ ಎಂದು ತಿಳಿಸಿದರು.

ಇಂದು ಖರ್ಗೆ ಸಾಹೇಬರ ಜೊತೆಯಲ್ಲೇ ದಾವಣಗೆರೆಗೆ ಹೋಗುತ್ತಿದ್ದೇವೆ. ತುರ್ತು ಕಾರಣಕ್ಕೆ ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿತ್ತು. ಮಂಜು ಕವಿದ ವಾತಾವರಣ ಇರುವ ಕಾರಣಕ್ಕೆ ತಡವಾಯಿತು ಎಂದರು. ಅಧಿವೇಶನ ಮುಗಿದ ಬಳಿಕ ಮತ್ತೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, ಪಕ್ಷದಲ್ಲಿ ನಮ್ಮ ಅವರ ಮಧ್ಯೆ ಮಾತುಕತೆ ಇದ್ದೇ ಇರುತ್ತದೆ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ತಿಳಿಸಿದರು.

Comments (0)

Your email address will not be published. Required fields are marked *

Back to top button