ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಂದು ಕಾಲು ಬಿಜೆಪಿಯಲ್ಲಿ ಇಟ್ಟಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಈಗಾಗಲೇ ದೆಹಲಿಯಲ್ಲಿ ಒಂದು ಸುತ್ತಿನ ಚರ್ಚೆ ನಡೆಸಿದ್ದಾರೆ. ಆದರೆ ಅವರಿಗೆ ಶಾಸಕರ ಬೆಂಬಲ ಕಡಿಮೆ ಇದೆ ಎಂಬ ಕಾರಣಕ್ಕೆ ಅದು ಮುಂದುವರಿಯಲಿಲ್ಲ ಎಂದು ಯತ್ನಾಳ್ ಹೇಳಿದ್ದಾರೆ.
ಡಿಕೆ ಶಿವಕುಮಾರ್ ಈಗಾಗಲೇ ಬಿಜೆಪಿಯಲ್ಲಿ ಒಂದು ಕಾಲು ಇಟ್ಟಾಗಿದೆ. ನಮ್ಮ ಮಹಾಮಹಿಮ ರಾಜ್ಯಾಧ್ಯಕ್ಷರ ಜೊತೆ ದೆಹಲಿಯಲ್ಲಿ ಒಂದು ಸುತ್ತಿನ ಚರ್ಚೆ ನಡೆದಿದೆ. ಸುಮಾರು 60 ರಿಂದ 70 ಕಾಂಗ್ರೆಸ್ ಶಾಸಕರನ್ನು ಕರೆದುಕೊಂಡು ಬಿಜೆಪಿಗೆ ಬಂದು ನಮಸ್ತೇ ಸದಾ ವತ್ಸಲೇ ಎಂದು ಹೇಳುವ ಯೋಜನೆಯನ್ನೂ ಅವರು ಹಾಕಿಕೊಂಡಿದ್ದರು. ಆದರೆ 12 ರಿಂದ 13 ಮಂದಿ ಶಾಸಕರ ಬೆಂಬಲವುಯವೂ ಅವರಿಗಿಲ್ಲ, ಎಲ್ಲರೂ ಸಿಎಂ ಸಿದ್ದರಾಮಯ್ಯ ಕಡೆ ಇದ್ದಾರೆ ಎಂಬುದು ಇಂಟಲಿಜೆನ್ಸ್ ಮಾಹಿತಿಯಿಂದ ತಿಳಿದು ಬಂದಿತ್ತು. ಈ ಬಗ್ಗೆ ನಮ್ಮ ಹೈಕಮಾಂಡ್ ನಾಯಕರೇ ಒಬ್ಬರು ನನ್ನ ಬಳಿ ಕೇಳಿದ್ದರು. ಡಿಕೆ ಶಿವಕುಮಾರ್ ಬಳಿ ಎಷ್ಟು ಕಾಂಗ್ರೆಸ್ ಶಾಸಕರಿದ್ದಾರೆ ಎಂದು ಕೇಳಿದ್ದರು. ಒಂದು ಹತ್ತು ಮಂದಿ ಇರಬಹುದು. ಬಿಜೆಪಿಗೆ ಬರುತ್ತಾರೆಂದು ಗೊತ್ತಾದರೆ ಅವರು ಕೂಡ ಇರಲಿಕ್ಕಿಲ್ಲ ಎಂದು ಹೇಳಿದ್ದೆ ಎಂದು ಯತ್ನಾಳ್ ಹೇಳಿದ್ದಾರೆ.
ಇನ್ನು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿರುವ ಡಿಕೆ ಶಿವಕುಮಾರ್, ಸಗಣಿ ಮೇಲೆ ಕಲ್ಲು ಹಾಕಲು ಇಷ್ಟ ಇಲ್ಲ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರು ಹೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನೋಡಿ ಆ ಕಸ, ಸಗಣಿ ಮೇಲೆ ಕಲ್ಲು ಹಾಕಲು ನನಗೆ ಇಷ್ಟವಿಲ್ಲ ಎಂದರು.