Wednesday, February 11, 2026
19.8 C
Bengaluru
Google search engine
LIVE
ಮನೆರಾಜಕೀಯಸೋನಿಯಾ ಗಾಂಧಿ ಭೇಟಿಗೆ ಡಿಕೆಶಿ ದೆಹಲಿ ಲಾಬಿ; ಸಿದ್ದರಾಮಯ್ಯ ಕೆಂಡಾಮಂಡಲ..!

ಸೋನಿಯಾ ಗಾಂಧಿ ಭೇಟಿಗೆ ಡಿಕೆಶಿ ದೆಹಲಿ ಲಾಬಿ; ಸಿದ್ದರಾಮಯ್ಯ ಕೆಂಡಾಮಂಡಲ..!

ಕರ್ನಾಟಕ ಕಾಂಗ್ರೆಸ್‌ನಲ್ಲಿ ‘ಸಿಎಂ ಕುರ್ಚಿ’ಗಾಗಿ ನಡೆಯುತ್ತಿರುವ ಶೀತಲ ಸಮರ ಈಗ ಮತ್ತೆ ದೆಹಲಿ ಅಂಗಳಕ್ಕೆ ತಲುಪಿದೆ. ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿರುವುದು ರಾಜಕೀಯ ವಲಯದಲ್ಲಿ ಹಲವು ಸಂಶಯಗಳಿಗೆ ದಾರಿ ಮಾಡಿಕೊಟ್ಟಿದೆ. ನಾಯಕತ್ವ ಬದಲಾವಣೆಯ ಕುರಿತು ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿದ್ದ ಗುಸುಗುಸು ಈಗ ಬಹಿರಂಗ ಸಂಘರ್ಷದ ರೂಪ ಪಡೆಯುವ ಲಕ್ಷಣಗಳು ಕಾಣಿಸುತ್ತಿವೆ.

ಶತಾಯಗತಾಯ ಈ ಬಾರಿ ಮುಖ್ಯಮಂತ್ರಿ ಪಟ್ಟ ಅಲಂಕರಿಸಲೇಬೇಕು ಎಂಬ ದೃಢ ನಿರ್ಧಾರ ಮಾಡಿರುವ ಡಿ.ಕೆ. ಶಿವಕುಮಾರ್, ಹೈಕಮಾಂಡ್ ಮಟ್ಟದಲ್ಲಿ ಪ್ರಬಲ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ದೆಹಲಿಯಲ್ಲಿ ಬೀಡುಬಿಟ್ಟಿರುವ ಅವರು, ಸೋನಿಯಾ ಗಾಂಧಿ ಅವರನ್ನು ನೇರವಾಗಿ ಭೇಟಿಯಾಗಿ ಅಧಿಕಾರ ಹಂಚಿಕೆಯ ಸೂತ್ರದ ಬಗ್ಗೆ ಮಾತುಕತೆ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಡಿಕೆಶಿ ಅವರ ಈ ನಡೆ ಹೈಕಮಾಂಡ್ ಮೇಲೆ ಒತ್ತಡ ಹೇರುವ ತಂತ್ರಗಾರಿಕೆಯ ಭಾಗವಾಗಿದ್ದು, ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಬದಲಾವಣೆಗೆ ಮುನ್ನುಡಿ ಬರೆಯುವ ಸಾಧ್ಯತೆಯಿದೆ.

ಇತ್ತ ಡಿ.ಕೆ. ಶಿವಕುಮಾರ್ ಅವರ ಈ ‘ದಿಢೀರ್ ದೆಹಲಿ ಮಿಷನ್’ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೆಂಗಣ್ಣಿಗೆ ಗುರಿಯಾಗಿದೆ. ಬಜೆಟ್ ಸಿದ್ಧತೆಯಲ್ಲಿ ತೊಡಗಿರುವ ಸಿಎಂಗೆ ಮಾಹಿತಿ ನೀಡದೆ ಅಥವಾ ವಿಶ್ವಾಸಕ್ಕೆ ತೆಗೆದುಕೊಳ್ಳದೆ ನಡೆಸುತ್ತಿರುವ ಈ ತಂತ್ರಗಾರಿಕೆ ಸಿದ್ದರಾಮಯ್ಯ ಬಣವನ್ನು ಕೆರಳಿಸಿದೆ. ಇದರಿಂದಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬೆಂಬಲಿಗರ ನಡುವೆ ಮತ್ತೆ ಶಕ್ತಿ ಪ್ರದರ್ಶನ ಆರಂಭವಾಗಿದ್ದು, ಬಜೆಟ್‌ಗಿಂತಲೂ ಹೆಚ್ಚಾಗಿ ಸಿಎಂ ಕುರ್ಚಿ ಕಿತ್ತಾಟವೇ ಚರ್ಚೆಯ ವಿಷಯವಾಗಿದೆ. ಈ ಆಂತರಿಕ ಕಚ್ಚಾಟವು ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಸೋನಿಯಾ ಗಾಂಧಿಯವರ ಭೇಟಿಯ ನಂತರ ರಾಜ್ಯ ಕಾಂಗ್ರೆಸ್‌ನಲ್ಲಿ ಯಾವ ತಿರುವು ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments