ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೆಲವು ಕಾಂಗ್ರೆಸ್ ಜಿಲ್ಲಾ ಘಟಕಗಳಿಗೆ ಕಾರ್ಯಾಧ್ಯಕ್ಷರನ್ನು ನೇಮಿಸಿರುವುದು ಈಗ ಪಕ್ಷದೊಳಗೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ನಿರ್ಧಾರದಿಂದ ಜಿಲ್ಲಾ ಕಾಂಗ್ರೆಸ್ ಸಮಿತಿಗಳಲ್ಲಿ ಅಸಮಾಧಾನದ ಹೊಗೆಯಾಡುತ್ತಿದ್ದು, ತಮಗೆ ಬೇಕಾದ ಕಡೆಗಳಲ್ಲಿ ಮಾತ್ರ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಸಿಎಂ ಕುರ್ಚಿ ಕದನ ಮತ್ತು ಸಚಿವ ಸಂಪುಟ ವಿಸ್ತರಣೆಯ ಗೊಂದಲಗಳ ನಡುವೆಯೇ ಡಿಕೆಶಿ ಅವರ ಈ ಹೊಸ ಪದ್ಧತಿಯು ಪಕ್ಷದ ಆಂತರಿಕ ವಲಯದಲ್ಲಿ ಹೊಸ ಸಂಚಲನ ಮೂಡಿಸಿದೆ.

ಡಿಸಿಸಿ ಅಧ್ಯಕ್ಷರಿಗೆ ಸಮಾನಾಂತರವಾಗಿ ಹೊಸ ಕಾರ್ಯಾಧ್ಯಕ್ಷರ ಹುದ್ದೆಯನ್ನು ಸೃಷ್ಟಿಸಿರುವುದು ಗೊಂದಲಕ್ಕೆ ಕಾರಣವಾಗಿದೆ ಎಂದು ಹಲವು ಘಟಕಗಳು ಕಿಡಿಕಾರಿವೆ. ಈ ನೇಮಕಾತಿಯ ಹಿಂದೆ ಡಿ.ಕೆ. ಶಿವಕುಮಾರ್ ಜಿಲ್ಲಾ ಮಟ್ಟದಲ್ಲಿ ಪರ್ಯಾಯ ನಾಯಕರನ್ನು ಹುಟ್ಟುಹಾಕುತ್ತಿದ್ದಾರೆ ಎಂಬ ಗುಮಾನಿ ವ್ಯಕ್ತವಾಗಿದೆ. ಇದು ಕೇವಲ ಸಾಧಾರಣ ನೇಮಕಾತಿಯಲ್ಲ, ಬದಲಿಗೆ 2028ರ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾಡಲಾಗಿರುವ ‘ಮೆಗಾ ಪ್ಲ್ಯಾನ್’ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಕಾರ್ಯಾಧ್ಯಕ್ಷರಿಗೆ ನೀಡಿರುವ ಟಾಸ್ಕ್ ಕೂಡ ಅಷ್ಟೇ ಗಂಭೀರವಾಗಿದೆ. ಹಾಲಿ ಶಾಸಕರ ಕಾರ್ಯವೈಖರಿ, ಜನರೊಂದಿಗಿನ ಸಂಪರ್ಕ ಮತ್ತು 2028ರ ಚುನಾವಣೆಯಲ್ಲಿ ಅವರ ಸೋಲು-ಗೆಲುವಿನ ಸಾಧ್ಯತೆಗಳ ಬಗ್ಗೆ ಪರೋಕ್ಷವಾಗಿ ಸರ್ವೆ ನಡೆಸಲು ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಸ್ಥಿತಿಗತಿ ಹಾಗೂ ಕ್ಷೇತ್ರ ಬದಲಾವಣೆಯ ಸಾಧಕ-ಬಾಧಕಗಳ ಬಗ್ಗೆ ವರದಿ ಪಡೆಯುವ ಮೂಲಕ, ಅಭ್ಯರ್ಥಿಗಳ ಆಯ್ಕೆಗೆ ಈಗಿನಿಂದಲೇ ಸಿದ್ಧತೆ ನಡೆಸಲಾಗುತ್ತಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಡಿಸಿಸಿ ಅಧ್ಯಕ್ಷರು ಮತ್ತು ಕಾರ್ಯಾಧ್ಯಕ್ಷರ ನಡುವೆ ಪೈಪೋಟಿ ಏರ್ಪಡುವ ಸಾಧ್ಯತೆ ದಟ್ಟವಾಗಿದೆ.


