ತುಮಕೂರು ಜಿಲ್ಲೆಯ ಮಧುಗಿರಿ ಬೆಟ್ಟದ ಪ್ರವಾಸೋದ್ಯಮಕ್ಕೆ ಹೊಸ ಕಳೆ ನೀಡಲು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಮಹತ್ವದ ಹೆಜ್ಜೆ ಇರಿಸಿದ್ದಾರೆ. ಏಷ್ಯಾದಲ್ಲೇ ಎರಡನೇ ಅತಿದೊಡ್ಡ ಏಕಶಿಲಾ ಬೆಟ್ಟ ಎಂಬ ಖ್ಯಾತಿ ಹೊಂದಿರುವ ಮಧುಗಿರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡಲು ಕೇಂದ್ರ ಪುರಾತತ್ವ ಇಲಾಖೆಯಿಂದ ಶೀಘ್ರವೇ ಅನುಮೋದನೆ ನೀಡುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಮಧುಗಿರಿ ಬೆಟ್ಟವು ತನ್ನ ಐತಿಹಾಸಿಕ ಕೋಟೆ ಮತ್ತು ಪ್ರಾಕೃತಿಕ ಸೌಂದರ್ಯದಿಂದ ಪ್ರವಾಸಿಗರನ್ನು ಸೆಳೆಯುತ್ತಿದೆಯಾದರೂ, ಕಡಿದಾದ ಹಾದಿಯನ್ನು ಹತ್ತುವುದು ಎಲ್ಲರಿಗೂ ಸುಲಭವಲ್ಲ. ರೋಪ್ ವೇ ನಿರ್ಮಾಣವಾದರೆ ವಯೋವೃದ್ಧರು ಮತ್ತು ಮಕ್ಕಳು ಸೇರಿದಂತೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಬೆಟ್ಟದ ಸೌಂದರ್ಯವನ್ನು ಸವಿಯಲು ಸಾಧ್ಯವಾಗುತ್ತದೆ. ಇದರಿಂದ ಮಧುಗಿರಿ ಒಂದು ವಿಶೇಷ ಪ್ರವಾಸಿ ಹಬ್ ಆಗಿ ಮಾರ್ಪಡುವುದಲ್ಲದೆ, ಸ್ಥಳೀಯವಾಗಿ ಉದ್ಯೋಗಾವಕಾಶಗಳು ಹೆಚ್ಚಿ ಆರ್ಥಿಕ ಅಭಿವೃದ್ಧಿಗೂ ಪೂರಕವಾಗಲಿದೆ ಎಂದು ಸೋಮಣ್ಣ ವಿವರಿಸಿದ್ದಾರೆ.
ಕೇವಲ ಮಧುಗಿರಿ ಮಾತ್ರವಲ್ಲದೆ, ಜಿಲ್ಲೆಯ ಇತರ ಪ್ರಸಿದ್ಧ ತಾಣಗಳಾದ ಸಿದ್ದರ ಬೆಟ್ಟ ಮತ್ತು ದೇವರಾಯದುರ್ಗವನ್ನು ‘ಸ್ವದೇಶ ದರ್ಶನ’ ಯೋಜನೆಯಡಿ ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ಬಿಡುಗಡೆ ಮಾಡುವಂತೆಯೂ ಒತ್ತಾಯಿಸಲಾಯಿತು. ಈ ಎಲ್ಲಾ ಪ್ರಸ್ತಾವನೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿರುವ ಸಚಿವ ಶೇಖಾವತ್ ಅವರು, ಶೀಘ್ರದಲ್ಲೇ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.


