ಮುಂಬೈನಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರನ್ನು ಅಭಿನಂದಿಸಿದರು.
ಮುಂಬೈ: ಮಹಾರಾಷ್ಟ್ರ ಸರ್ಕಾರ ರಚನೆಗೆ ತಾರ್ಕಿಕ ಅಂತ್ಯ ಕಾಣುತ್ತಿದೆ. ಇಂದು ಬುಧವಾರ ಮುಂಬೈಯಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ಮುಖ್ಯಮಂತ್ರಿಯಾಗಿ ಅವರ ಹಾದಿ ಸುಗಮವಾಗಿದೆ.
ಮುಂಬೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಇಲ್ಲಿ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಫಡ್ನವೀಸ್ ಅವರ ಹೆಸರನ್ನು ಶಾಸಕ ಪಕ್ಷದ ನಾಯಕ ಸ್ಥಾನಕ್ಕೆ ಸೂಚಿಸಲಾಯಿತು. ಮಹಾಯುತಿ ಒಕ್ಕೂಟದ ನಾಯಕರು ಇಂದು ಅಪರಾಹ್ನ 3.30ಕ್ಕೆ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ ಎಂದು ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ತಿಳಿಸಿದ್ದಾರೆ.
ಬಿಜೆಪಿ ನೇತೃತ್ವದ ಹೊಸ ಮಹಾಯುತಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನವನ್ನು ವಹಿಸಿಕೊಳ್ಳಲು ಏಕನಾಥ್ ಶಿಂಧೆ ಒಪ್ಪಿಕೊಂಡಿದ್ದಾರೆ ಎಂದು ಇಂಡಿಯಾ ಟುಡೇ ಮತ್ತು ನ್ಯೂಸ್ 18 ವರದಿ ಮಾಡಿವೆ.
ಶಿಂಧೆ ಮತ್ತು ಫಡ್ನವಿಸ್ ನಡುವೆ ನಿನ್ನೆ ನಡೆದ ಒಂದು ಗಂಟೆ ಅವಧಿಯ ಸಭೆಯ ವಿವರಗಳು ಅಸ್ಪಷ್ಟವಾಗಿದ್ದರೂ, ಕೆಲವು ರಾಜಕೀಯ ವೀಕ್ಷಕರು ಇದನ್ನು ಬಿಜೆಪಿಯು ಶಿವಸೇನೆ ನಾಯಕರನ್ನು ಸಮಾಧಾನಪಡಿಸುವ ಪ್ರಯತ್ನವೆಂದು ಹೇಳಿದ್ದಾರೆ. ಆದರೆ ಇದು ನಾಳೆ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭ ಕುರಿತು ಎಂದು ಹೇಳಲಾಗುತ್ತಿದೆ.