
ಉಡುಪಿ: ಕಾಂಗ್ರೆಸ್ನ ಯುವ ಮುಖಂಡ ಹಾಗೂ ಎನ್ಎಸ್ಯುಐ (NSUI) ಉಪಾಧ್ಯಕ್ಷ ಶರತ್ ಕುಂದರ್ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ತಲ್ವಾರ್ನಿಂದ ಅಟ್ಯಾಕ್ ಮಾಡಿದೆ. ಉಡುಪಿ ಜಿಲ್ಲೆಯ ಪಿಪಿಸಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ಶಂಕಿಸಲಾಗಿದೆ.
ಮಣಿಪಾಲದ ಹೋಟೆಲ್ವೊಂದರಲ್ಲಿ ಇತ್ತೀಚೆಗೆ ನಡೆದಿದ್ದ ಸಣ್ಣ ಗಲಾಟೆಯೇ ಈ ದಾಳಿಗೆ ಕಾರಣ ಎನ್ನಲಾಗಿದೆ. ಮಾತುಕತೆ ನಡೆಸೋಣ ಎಂದು ಶರತ್ ಅವರನ್ನು ಸ್ಥಳಕ್ಕೆ ಕರೆಸಿಕೊಂಡ 6 ರಿಂದ 7 ಜನರ ತಂಡ, ಏಕಾಏಕಿ ತಲ್ವಾರ್ಗಳಿಂದ ದಾಳಿ ನಡೆಸಿದೆ.
ಆರೋಪಿಗಳು ಟಾಟಾ ಸಫಾರಿ ಮತ್ತು ಮಹೀಂದ್ರ ಥಾರ್ ವಾಹನಗಳಲ್ಲಿ ಬಂದು, ಶರತ್ ಕುಂದರ್ ಅವರನ್ನು ತಲ್ವಾರ್ಗಳಿಂದ ಮನಬಂದಂತೆ ದಾಳಿ ಮಾಡಿ ಕೊಲೆಗೆ ಯತ್ನಿಸಲಾಗಿದೆ. ನಿನ್ನನ್ನು ಜೀವಸಹಿತ ಬಿಡುವುದಿಲ್ಲ” ಎಂದು ಕಿರುಚುತ್ತಾ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಶರತ್ ಕುಂದರ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.




