ರಾಜಕೀಯರಾಜ್ಯಸುದ್ದಿ

ಮತ್ತೊಮ್ಮೆ ಮೋದಿ ನಮ್ಮ ಆಶಯ – ಸುನಿಲ್​ ಕುಮಾರ್​

ಬೆಂಗಳೂರು : ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿಂದಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಏಪ್ರಿಲ್ 2ರಂದು ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ. ಸುನೀಲ್ ಕುಮಾರ್ ಅವರು ತಿಳಿಸಿದರು.

ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರ ಹೋಟೆಲ್ ಜಿ. ಎಂ. ರಿಜಾಯ್ಸ್ ನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2ರಂದು ಇಡೀದಿನ ಕರ್ನಾಟಕದಲ್ಲಿ ಬೇರೆಬೇರೆ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. 370ನೇ ವಿಧಿಯನ್ನು ರದ್ದು ಮಾಡುವ ಮೂಲಕ ದೇಶ ಒಂದು ಎಂಬ ಸಂದೇಶ ನೀಡುವ ಗಟ್ಟಿತನದ ನಿರ್ಧಾರ ಪ್ರಕಟಿಸಿದವರು ಸನ್ಮಾನ್ಯ ಅಮಿತ್ ಶಾ ಅವರು ಎಂದು ತಿಳಿಸಿದರು.

ಅವರ ಭೇಟಿ ನಮ್ಮಲ್ಲಿ ಉತ್ಸಾಹ ಮೂಡಿಸುತ್ತಿದೆ ಎಂದು ಹೇಳಿದರು. ದೇಶ ಒಡೆಯುವ ಹೇಳಿಕೆ ನೀಡಿದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರು ನಮ್ಮ ಕಣ್ಮುಂದೆ ಇದ್ದಾರೆ. ದೇಶ ವಿಭಜನೆಯು ಕಾಂಗ್ರೆಸ್ ಮಾನಸಿಕತೆ ಎಂದು ಆಕ್ಷೇಪಿಸಿದರು. ಆದರೆ, ನಮ್ಮ ಮಾನಸಿಕತೆ ದೇಶ ಜೋಡಿಸುವುದು ಎಂದು ತಿಳಿಸಿದರು. ಅಮಿತ್ ಶಾ ಅವರು ಚನ್ನಪಟ್ಟಣದಿಂದ ಚುನಾವಣಾ ಪ್ರಚಾರ ಆರಂಭಿಸುತ್ತಾರೆ.

ದೇಶ ಒಡೆಯುವವರು ಬೇಕೇ ಅಥವಾ ದೇಶ ಒಂದು ಮಾಡುವವರು ಬೇಕೇ ಎಂಬ ಪ್ರಶ್ನೆಯ ಅಡಿಯಲ್ಲೇ ಈ ಚುನಾವಣೆ ನಡೆಯಲಿದೆ. ದೇಶ ಒಡೆಯುವ ಮಾನಸಿಕತೆಯನ್ನೇ ಸಮರ್ಥಿಸುವ ಕಾಂಗ್ರೆಸ್, ದೇಶ ಒಂದು ಮಾಡುವುದಾಗಿ ಸಂದೇಶ ನೀಡುವ ಅಮಿತ್ ಶಾ ಅವರು ಚನ್ನಪಟ್ಟಣದಲ್ಲಿ ರೋಡ್ ಷೋ ಮೂಲಕ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದರು.

ಅಮಿತ್ ಶಾ ಅವರು ಬೆಳಿಗ್ಗೆ 9 ಗಂಟೆಗೆ ಎರಡೂ ಪಕ್ಷಗಳ ಪ್ರಮುಖ ನಾಯಕರ ಜೊತೆ ಉಪಾಹಾರ ಮಾಡುತ್ತಾರೆ. ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಶಕ್ತಿಕೇಂದ್ರಗಳ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸುತ್ತಾರೆ. ಸುಮಾರು 5 ಸಾವಿರ ಕಾರ್ಯಕರ್ತರ ಸಮಾವೇಶ ಇದಾಗಿರುವುದು ಎಂದು ವಿವರ ನೀಡಿದರು.

ಮಧ್ಯಾಹ್ನ 2 ಗಂಟೆಯಿಂದ 5ರವರೆಗೆ ಬೆಂಗಳೂರಿನಲ್ಲಿ ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ ಕ್ಷೇತ್ರಗಳ ಪ್ರಮುಖರ ಜೊತೆ ಪ್ರತ್ಯೇಕವಾದ ಸಭೆ ನಡೆಯಲಿದೆ. ಸಂಜೆ 6ಕ್ಕೆ ಚನ್ನಪಟ್ಟಣದಲ್ಲಿ ರೋಡ್ ಷೋ ಇರುತ್ತದೆ. ಚುನಾವಣಾ ಪ್ರಚಾರಕ್ಕೆ ಇದು ಹೆಚ್ಚಿನ ವೇಗ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ, ಸಾಮಾಜಿಕ ಜಾಲತಾಣ ರಾಜ್ಯ ಸಂಚಾಲಕ ಪ್ರಶಾಂತ್ ಮಾಕನೂರು, ರಾಜ್ಯ ವಕ್ತಾರರಾದ ಮೋಹನ್ ವಿಶ್ವ, ಕು. ಸುರಭಿ ಹೊದಿಗೆರೆ ಅವರು ಭಾಗವಹಿಸಿದ್ದರು.

 

Comments (0)

Your email address will not be published. Required fields are marked *

Back to top button