ಭಾರತೀಯ ಜನತಾ ಪಾರ್ಟಿಯನ್ನು ತಳಮಟ್ಟದಿಂದ ಕಟ್ಟಿ ಬಲಿಷ್ಟಗೊಳಿಸಿದ ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ನೀಡಿ ಗೌರವಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲಾಲ್ ಕೃಷ್ಣ ಅಡ್ವಾಣಿ ಅವರ ಮನೆಗೆ ಭೇಟಿ ನೀಡಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಖರ್ ಮತ್ತು ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಉಪಸ್ಥಿತರಿದ್ದರು. ಲಾಲ್ ಕೃಷ್ಣ ಅಡ್ವಾಣಿ 1980 ರಲ್ಲಿ ಬಿಜೆಪಿ ಸ್ಥಾಪನೆಯಾದ ನಂತರ ಸುದೀರ್ಘ ಅವಧಿಗೆ ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು.
ಸುಮಾರು ಮೂರು ದಶಕಗಳ ಕಾಲ ಸಂಸದೀಯ ವೃತ್ತಿಜೀವನದ ಅವಧಿಯಲ್ಲಿ, ಲಾಲ್ ಕೃಷ್ಣ ಅಡ್ವಾಣಿ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದ (1999-2004) ಕ್ಯಾಬಿನೆಟ್ನಲ್ಲಿ ಮೊದಲ ಗೃಹ ಸಚಿವರಾಗಿದ್ದರು ಮತ್ತು ನಂತರ ಉಪಪ್ರಧಾನಿಯಾಗಿದ್ದರು. 1990 ರ ದಶಕದಲ್ಲಿ ಅವರ ರಥಯಾತ್ರೆಯ ನಂತರವೇ ಬಿಜೆಪಿ ರಾಷ್ಟ್ರೀಯ ರಾಜಕೀಯದಲ್ಲಿ ಹೊರಹೊಮ್ಮಿತು. ಫೆಬ್ರವರಿ 3, 2024 ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡುವುದಾಗಿ ಘೋಷಿಸಿತು.