ರಾಜಕೀಯರಾಜ್ಯಸುದ್ದಿ

14 ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ಇಂದು ತೆರೆ-ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷಿದ್ಧ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ವ್ಯಾಪಕವಾಗಿ ನಡೆಸಿದ ಬಹಿರಂಗ ಸಭೆಗಳು, ಪಾದಯಾತ್ರೆಗಳ ಮೂಲಕ ಮತದಾರರ ಮನ ಗೆಲ್ಲಲು ಈ ಕ್ಷೇತ್ರಗಳ ಅಭ್ಯರ್ಥಿಗಳು ಸಜ್ಜಾಗಿದ್ದಾರೆ. ಗುರುವಾರ ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಮಾತ್ರ ಅವಕಾಶವಿದೆ.

ರಾಜ್ಯದಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.

ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಸೋಮವಾರ ಚುನಾವಣಾ ಕಣ ಅಂತಿಮಗೊಂಡಿತ್ತು. ಮಂಗಳವಾರದಿಂದ ಪ್ರಚಾರ ಬಿರುಸು ಪಡೆದಿದೆ. ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳ ಘಟಾನುಘಟಿ ನಾಯಕರು ಶುಕ್ರವಾರದಿಂದ ಎರಡನೇ ಹಂತದ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಸಜ್ಜಾಗಿದ್ದಾರೆ.

ಇನ್ನೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ಕೊಂಡೊಯ್ಯುವಾಗ ಜಾಗರೂಕರಾಗಿರಬೇಕು. ಏಕೆಂದರೆ, ಬೂತ್‌ಗಳ ಆವರಣದಲ್ಲಿಮೊಬೈಲ್ ಬಳಕೆಗೆ ನಿರ್ಬಂಧವಿರುತ್ತದೆ.

ಬೂತ್‌ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ (ಸಿಇಒ) ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. ಮತದಾರರು ತಮ್ಮ ಮತ ಚಲಾಯಿಸಲು ಹೋಗುವ ಮೊದಲು ತಮ್ಮ ಫೋನ್‌ಗಳನ್ನು ಇಡಲು ವಿಶೇಷ ಸ್ಥಳದ ವ್ಯವಸ್ಥೆ ಮಾಡಲಾಗಿರುತ್ತದೆ.

Comments (0)

Your email address will not be published. Required fields are marked *

Back to top button