ಬೆಂಗಳೂರು: ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಪಲಾನುಭವಿಗಳಿಗೆ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಅಕ್ಕಿ ಲೆಕ್ಕದಲ್ಲಿ ಆಹಾರ ಧಾನ್ಯ ನೀಡಲು ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಿದೆ.
ಇಂದಿರಾ ಆಹಾರ ಕಿಟ್ನಲ್ಲಿ ಪೌಷ್ಟಿಕ ಆಹಾರ ವಿತರಣೆಗೆ ಇಂದಿನ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದ್ದು, ರಾಜ್ಯ ಸರ್ಕಾರದಿಂದ 5 ಕೆಜಿ ಅಕ್ಕಿ ಬದಲು ಆಹಾರ ಧಾನ್ಯಗಳ ವಿತರಣೆ ಮಾಡಲಾಗುತ್ತದೆ.
ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಯ ಜೊತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 5 ಕೆಜೆ ಅಕ್ಕಿಯನ್ನು ಸೇರಿಸಿ ಒಟ್ಟು 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಈ ಮುಂಚೆ ಅಕ್ಕಿಯ ಅಭಾವ ಹಿನ್ನಲೆ ಫಲಾನುಭವಿಗಳ ಖಾತೆಗೆ 175 ರೂ ಜಮಾ ಮಾಡಲಾಗುತ್ತಿತ್ತು.
ಅಕ್ಕಿಯ ದರ ಇಳಿಕೆ ಆದ ಬಳಿಕ ಕಳೆದ ಕೆಲ ತಿಂಗಳಿನಿಂದ ಮತ್ತೆ ಹಣದ ಬದಲಾಗಿ ಉಚಿತ ಅಕ್ಕಿ ನೀಡಲಾಗುತ್ತಿದೆ. ಇದೀಗ ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಇಂದಿರಾ ಕಿಟ್ನಲ್ಲಿ ಪೌಷ್ಟಿಕ ಆಹಾರ ವಿತರಣೆಗೆ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ.
ಇಂದಿರಾ ಆಹಾರ ಕಿಟ್ನಲ್ಲಿ ತೊಗರಿಬೆಳೆ, ಅಡುಗೆ ಎಣ್ಣೆ, ಉಪ್ಪು ಮತ್ತು ಸಕ್ಕರೆ ವಿತರಿಸಲು ನಿರ್ಧರಿಸಲಾಗಿದೆ. ಅನ್ನಭಾಗ್ಯ ಯೋಜನೆ ಅಕ್ಕಿ ಕಳ್ಳ ಸಾಗಾಟವಾಗುತ್ತಿದ್ದ ಹಿನ್ನೆಲೆ ಅದಕ್ಕೆ ಕಡಿವಾಣ ಹಾಕಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ.


