ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ರಾಜ್ಯಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ, ಕೇಂದ್ರ ಸರ್ಕಾರಕ್ಕೆ ಹಲವು ಉಪಯುಕ್ತ ಸಲಹೆಗಳನ್ನು ನೀಡಿದರು.
ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಮತ್ತು ಬ್ರೈನ್ ಸ್ಟ್ರೋಕ್ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ವರ್ಷದಲ್ಲಿ ಸರಾಸರಿ 30 ಲಕ್ಷಕ್ಕೂ ಹೆಚ್ಚು ಮಂದಿ 45 ವರ್ಷ ವಯಸ್ಸಿನ ಜನರು ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ರೋಗಿಗಳಿಗೆ ಅಂಜಿಯಾ ಪ್ಲಾಸ್ಟಿ ಚಿಕಿತ್ಸೆ, ಸ್ಟಂಟ್, ಇಂಜೆಕ್ಷನ್ ಮತ್ತು ವೈದ್ಯಕೀಯ ವೆಚ್ಚ ದುಬಾರಿಯಾಗಿದ್ದು, ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಇದರ ಸೌಲಭ್ಯ ಸಿಗುತ್ತಿಲ್ಲ. ಆಯುಷ್ಮಾನ್ ಭಾರತ್ ಕಾರ್ಡ್ನಲ್ಲಿ ಸೌಲಭ್ಯ ಸಿಗುವಂತೆ ಕೇಂದ್ರ ಸರ್ಕಾರ ಮಾಡಬೇಕು. ಕರ್ನಾಟಕ ಸೇರಿದಂತೆ ದೇಶದ ಎಲ್ಲಾ ರಾಜ್ಯಗಳ ತಾಲ್ಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವ ಅಗತ್ಯವಿದೆ ಎಂಬುದನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟರು. ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆ ಬಗ್ಗೆಯೂ ವಿವರಿಸಿದರು. ಮಹಿಳೆಯರಲ್ಲಿ ಗರ್ಭಕೋಶದ ಕ್ಯಾನ್ಸರ್ ಸಾಮಾನ್ಯವಾಗಿದ್ದು, ಇದರ ನಿಯಂತ್ರಣಕ್ಕೆ ಶಾಲೆಯಲ್ಲಿ ಓದುತ್ತಿರುವ 10 ರಿಂದ 16 ವರ್ಷದ ಹೆಣ್ಣುಮಕ್ಕಳಿಗೆ HPV ಚುಚ್ಚುಮದ್ದನ್ನು ರಾಷ್ಟ್ರೀಯ ರೋಗನಿರೋಧಕ ಕಾರ್ಯಕ್ರಮದ ಮೂಲಕ ಒದಗಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.”ಆಯುಷ್ಮಾನ್ ಭಾರತ್” ಬಡ ಮತ್ತು ನಿರ್ಗತಿಕ ರೋಗಿಗಳಿಗೆ ಅನುಕೂಲವಾಗಿದೆ. ಇಲ್ಲಿಯವರೆಗೆ ಸುಮಾರು 65 ಕೋಟಿ ಜನ ಈ ಯೋಜನೆಯಡಿ ದಾಖಲಾಗಿದ್ದು, ಸುಮಾರು 7 ಕೋಟಿ ಫಲಾನುಭವಿಗಳು ಈಗಾಗಲೇ ಚಿಕಿತ್ಸೆ ಪಡೆದಿದ್ದಾರೆ. ದೇಶದ ಅತಿದೊಡ್ಡ ಆರೋಗ್ಯ ರಕ್ಷಣಾ ಕಲ್ಯಾಣ ಯೋಜನೆಯಾಗಿರುವ ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿದ ಪ್ರಧಾನಿ ನರೇಂದ್ರ ಮೋದಿಯವರು ಮತ್ತು ಕೇಂದ್ರದ ಆರೋಗ್ಯ & ಕುಟುಂಬ ಕಲ್ಯಾಣ ಸಚಿವರಾದ ಜೆ.ಪಿ ನಡ್ಡಾಗೆ ಹೆಚ್.ಡಿ. ದೇವೇಗೌಡರು ಅಭಿನಂದನೆ ಸಲ್ಲಿಸಿದರು.