ಕರ್ನಾಟಕದ ಮಲೆನಾಡು ಮತ್ತು ಅರೆಮಲೆನಾಡು ಭಾಗದ ಜಿಲ್ಲೆಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಆನೆ ದಾಳಿ ಹಾಗೂ ವನ್ಯಜೀವಿಗಳ ಉಪಟಳಕ್ಕೆ ಬ್ರೇಕ್ ಹಾಕಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದಾರೆ.
ಸಂಸತ್ ಭವನದಲ್ಲಿ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿದ ಅವರು, ರಾಜ್ಯದ ರೈತರು ಎದುರಿಸುತ್ತಿರುವ ಜೀವಭಯದ ಬಗ್ಗೆ ಗಂಭೀರವಾಗಿ ಚರ್ಚಿಸಿದರು. ವಿಶೇಷವಾಗಿ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಶಿವಮೊಗ್ಗ ಭಾಗಗಳಲ್ಲಿ ಆನೆಗಳ ದಾಳಿಯಿಂದ ಸಂಭವಿಸುತ್ತಿರುವ ಸಾವು-ನೋವುಗಳನ್ನು ತಡೆಯಲು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದರು.ಈ ಸಮಸ್ಯೆಯು ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು, ಕೇವಲ ತಾತ್ಕಾಲಿಕ ಪರಿಹಾರಗಳ ಬದಲಿಗೆ ವೈಜ್ಞಾನಿಕ ಮತ್ತು ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವಂತೆ ಕೇಂದ್ರ ಸಚಿವರಿಗೆ ವಿನಂತಿಸಿದರು.
ಅರಣ್ಯದ ಅಂಚಿನಲ್ಲಿ ವಾಸಿಸುವ ರೈತರು ಮತ್ತು ದನಗಾಹಿಗಳು ವನ್ಯಜೀವಿಗಳ ದಾಳಿಗೆ ತುತ್ತಾಗಿ ಜೀವ ಕಳೆದುಕೊಳ್ಳುತ್ತಿರುವುದು ಹಾಗೂ ಅಂಗವೈಕಲ್ಯಕ್ಕೆ ಒಳಗಾಗುತ್ತಿರುವ ಬಗ್ಗೆ ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದರು. ಭೂಪೇಂದ್ರ ಯಾದವ್ ಅವರು, ಸಮಸ್ಯೆಯ ಗಂಭೀರತೆಯನ್ನು ಅರಿತು ತಕ್ಷಣವೇ ಕಾರ್ಯಪ್ರವೃತ್ತರಾಗುವ ಭರವಸೆ ನೀಡಿದರು. ಪ್ರಸಕ್ತ ಬಜೆಟ್ ಅಧಿವೇಶನ ಮುಗಿಯುವುದರೊಳಗೆ ಈ ಕುರಿತು ಸಮಗ್ರ ವರದಿಯನ್ನು ಸಲ್ಲಿಸುವಂತೆ ತಮ್ಮ ಇಲಾಖೆಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ರಾಜ್ಯದ ಪೀಡಿತ ಪ್ರದೇಶಗಳಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಕುಮಾರಸ್ವಾಮಿ ಹೆಚ್ಚಿನ ಮಾಹಿತಿ ಪಡೆದ ಸಚಿವರು, ಶೀಘ್ರದಲ್ಲೇ ಪರಿಹಾರ ಕಾರ್ಯಗಳಿಗೆ ಚಾಲನೆ ನೀಡುವುದಾಗಿ ತಿಳಿಸಿದರು.


