ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಮತ್ತೊಂದೆಡೆ ಕೊಗ್ರೆ-ಶೃಂಗೇರಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ಕೊಗ್ರೆ ಸಮೀಪದ ಹುಲ್ಲಿನಗದ್ದೆ ಸೇತುವೆಗೂ ಜಲದಿಗ್ಭಂದನವಾಗಿದೆ. ಸೇತುವೆ ಜಲಾವೃತವಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಸಂಚಾರಕ್ಕೆ ಪರದಾಡುವಂತಾಗಿದೆ. ಅಲ್ಲದೇ ರಣಮಳೆಗೆ ತುಂಗಾ ನದಿಯ ಒಳಹರಿವಿನಲ್ಲಿ ಗಣನೀಯ ಏರಿಕೆ ಕಂಡಿದೆ. ಇದರಿಂದ ಶೃಂಗೇರಿ ಪಟ್ಟಣದ ಗಾಂಧಿ ಮೈದಾನ ಸಂಪೂರ್ಣ ಜಲಾವೃತಗೊಂಡಿದೆ. ಮೈದಾನದಲ್ಲಿರುವ ಅಂಗಡಿ ಮುಂಗಟ್ಟುಗಳು ಅರ್ಧದಷ್ಟು ಮುಳುಗಡೆಯಾಗಿವೆ. ರಕ್ಷಣಾ ತಂಡಗಳು ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿವೆ.
ಹೆಬ್ಬಾಳೆ ಸೇತುವೆ ಮುಳುಗಡೆ:
ಭದ್ರಾ ನದಿ ಅಬ್ಬರದಿಂದ ಕಳಸ ತಾಲೂಕಿನ ಹೊರನಾಡು ಸೇತುವೆ ಬಳಿಕ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಹೊರನಾಡು-ಕಳಸ ನಡುವಿನ ಸಂಪರ್ಕ ಕಡಿತಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸೇತುವೆ ಎರಡೂ ಕಡೆ ಬ್ಯಾರಿಕೇಡ್ ಇರಿಸಲಾಗಿದ್ದು, ಹೆಬ್ಬಾಳೆ ಸೇತುವೆಯ ಮೇಲೆ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಸೇತುವೆ ಬಳಿ ಕಳಸ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.
ಹೇಮಾವತಿ ನದಿಗೆ ನೀರು:
ಮೂಡಿಗೆರೆ ತಾಲೂಕಿನ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ. ಗೊರೂರು ಡ್ಯಾಂ ನಿಂದ ನೀರು ಹರಿಸಲಾಗಿದೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com


