ಬೆಳಗಾವಿ : ನಾನಿನ್ನು ಸತ್ತಿಲ್ಲ, ಬದುಕಿದ್ದೇನೆ. ಈ ಡಿ.ಕೆ.ಶಿವಕುಮಾರ್ ಇನ್ನೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿದ್ದಾನೆ. ಬಿಜೆಪಿಯವರ ಪ್ರತಿಭಟನೆಗೆ ನಾನು ಹೆದರುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲೆಸೆದರು.
ಬೆಳಗಾವಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಸೋಮವಾರ ಪ್ರತಿಕ್ರಿಯಿಸಿದರು. ಬೆಳಗಾವಿಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಆಚರಣೆ ವೇಳೆ ಬಿಜೆಪಿಯವರು ಪ್ರತಿಭಟನೆಗೆ ಮುಂದಾಗಿರುವ ಬಗ್ಗೆ ಕೇಳಿದಾಗ, “ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಆಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನ, ರಾಷ್ಟ್ರಧ್ವಜ, ರಾಷ್ಟ್ರಗೀತೆ ನೀಡಿದ್ದಾರೆ. ಇದೆಲ್ಲವೂ ಅವರ ನೇತೃತ್ವದ ಹೋರಾಟದ ಫಲ. ಇದೆಲ್ಲವನ್ನು ಉಳಿಸಿಕೊಂಡು ಸರಿಯಾದ ರೀತಿಯಲ್ಲಿ ಜಾರಿಯಲ್ಲಿಡಬೇಕು. ಗಾಂಧೀಜಿ ಅವರನ್ನು ದಿನನಿತ್ಯ ನೆನೆಯಬೇಕು ಎಂಬ ಕಾರಣಕ್ಕೆ ಮಹಾತ್ಮ ಗಾಂಧಿಜಿ ಅವರ ಭಾವಚಿತ್ರವನ್ನು ನೋಟುಗಳ ಮೇಲೆ ಮುದ್ರಣ ಮಾಡಲಾಗಿದೆ. ಮಹಾತ್ಮ ಎಂಬ ಹೆಸರು ಪಡೆದ ನಾಯಕನ ಸ್ಮರಣೆ ಮಾಡುವ ಆಚರಣೆ ವೇಳೆ ಪ್ರತಿಭಟನೆ ಮಾಡುತ್ತೇವೆ ಎಂದರೆ ನಾವು ಹೆದರುತ್ತೇವಾ?” ಎಂದು ಸವಾಲೆಸೆದರು.