ಬೆಂಗಳೂರು, ಅಕ್ಟೋಬರ್ 15: ನಾನು ಮೊದಲು ತುಂಬಾ ಸಿಗರೇಟ್ ಸೇದುತ್ತಿದ್ದೆ. ಎಂಎಲ್ಎ ಆದ್ಮೇಲೆ ಸಿಗರೇಟ್ ಸೇದುವುದನ್ನು ಬಿಟ್ಟುಬಿಟ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಮಂಗಳವಾರ ನಡೆದ ತಂಬಾಕು ಮುಕ್ತ ಯುವ ಅಭಿಯಾನ 2.O ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಲಾಯರ್ ಆಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ದಿನಕ್ಕೆ ಬರೋಬ್ಬರಿ 4 ಪ್ಯಾಕೆಟ್ ವ್ಹೀಲ್ಸ್ ಸಿಗರೇಟ್ ಸೇದುತ್ತಿದ್ದೆ. ಒಂದು ಪ್ಯಾಕೆಟ್ನಲ್ಲಿ 10 ಅಂದುಕೊಂಡರೂ ದಿನಕ್ಕೆ 40 ಸಿಗರೇಟ್ ಸೇದುತ್ತಿದ್ದೆ. ನಾನು ಯಾವಾಗ ಶಾಸಕನಾದೆನೋ ಆಗ ಒಮ್ಮೆಲೇ ಜ್ಞಾನೋದಯವಾಗಿ ಸಿಗರೇಟ್ ಸೇದುವುದನ್ನೇ ಬಿಟ್ಟುಬಿಟ್ಟೆ ಎಂದು ಹೇಳಿದ್ದರು.
ತಂಬಾಕು ಸೇವನೆ ಮಾಡದಂತೆ ಯುವಸಮೂಹದ ಪ್ರತಿಜ್ಞೆ
ಇದೇ ವೇಳೆ ತಂಬಾಕು ಉತ್ಪನ್ನಗಳನ್ನು ಬಳಸುವುದಿಲ್ಲ ಎಂದು ಎಲ್ಲ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ವಿದ್ಯಾರ್ಥಿಗಳು ಪ್ರತಿಜ್ಞಾವಿಧಿಯನ್ನ ಚಾಚು ತಪ್ಪದೆ ಪಾಲಿಸಬೇಕು. ತಂಬಾಕು ಸೇವನೆಯಿಂದ ವಾರ್ಷಿಕ 13.5 ಲಕ್ಷ ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (World Health Organization-WHO)ಯ ವರದಿಯಿಂದ ಬಹಿರಂಗವಾಗಿದೆ ಎಂದು ತಿಳಿಸಿದರು.
ಅಲ್ಲದೆ, ಮಾದಕ ವಸ್ತುಗಳ ನಿಯಂತ್ರಣಕ್ಕೆ ಕಾನೂನಿನಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ರಾಜ್ಯ ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ ಮತ್ತು ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ನಮ್ಮ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ತಂಬಾಕು ಸೇವಿಸುವ ಶೇ.50 ರಷ್ಟು ಜನರಿಗೆ ಕ್ಯಾನ್ಸರ್
WHO ಸಂಸ್ಥೆಯವರ ವರದಿಯಂತೆ ಭಾರತದಲ್ಲಿ ಪ್ರತಿ ವರ್ಷ 13.5 ಲಕ್ಷ ಜನರು ತಂಬಾಕು ಸೇವನೆಯಿಂದ ಸಾವಿಗೀಡಾಗುತ್ತಿದ್ದಾರೆ ಎಂಬುದು ಆತಂಕಕಾರಿ ವಿಷಯ. ಯುವಜನತೆ ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಬದಲು ಈ ದುಶ್ಚಟಗಳಿಗೆ ಬಲಿಯಾಗುತ್ತಿರುವುದರಿಂದ ಈ ಪ್ರಮಾಣದ ಸಾವು ಸಂಭವಿಸುತ್ತಿದೆ. ತಂಬಾಕು ಸೇವಿಸುತ್ತಿರುವವರಲ್ಲಿ ಶೇ.50 ರಷ್ಟು ಜನ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಯುವಜನತೆ ತಂಬಾಕು ಸೇವನೆ ಹಾಗೂ ಮಾದಕವಸ್ತುಗಳ ವ್ಯಸನಕ್ಕೆ ಒಳಗಾಗಬಾರದು ಎಂದರು.
ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಧಾರವಾಡ ಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಿದ್ದು, ಇದನ್ನು ನಿಗ್ರಹಿಸಲು ಸರ್ಕಾರ ಅನೇಕ ಕಾನೂನುಗಳನ್ನು ರಚಿಸಿದೆ.. ಯುವಕ ಯುವತಿಯರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಲ್ಲಿ, ಕೂಡಲೇ ದುಶ್ಚಟಗಳನ್ನು ನಿಲ್ಲಿಸಬೇಕೆಂದು ಕರೆ ನೀಡಿದರು. ರಾಜ್ಯದ ಎಲ್ಲ ಯುವಸಮುದಾಯಗಳು ದುಶ್ಚಟಗಳಿಂದ ದೂರವಾಗುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು. ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದಂತೆ, ದುಶ್ಚಟಗಳಿಗೆ ಬಲಿಯಾಗದೇ ಆರೋಗ್ಯಕರ ಜೀವನ ನಡೆಸಿ ಯುವ ಸಮುದಾಯದವರಲ್ಲೂ ಸಂತಸ ಮೂಡುವಂತಾಗಲಿ ಎಂದು ಹಾರೈಸಿದರು.