Top Newsರಾಜಕೀಯ

ಮಿಸ್ಟರ್ ನಿರಾಣಿ ಬಾಗಲಕೋಟೆಗೆ ಬಂದೇ ಉತ್ತರ ನೀಡುವೆ: ಎಂ.ಬಿ.ಪಾಟೀಲ

ಬೆಂಗಳೂರು:

‘ನಾನು ವಿಜಯಪುರ ಜಿಲ್ಲೆಯವ ನನಗೂ ಭಾಷೆ ಗೊತ್ತಿದೆ. ಬಾಗಲಕೋಟೆಗೇ ಬಂದು ನಿನಗೆ ನಿನ್ನ ಭಾಷೆಯಲ್ಲೇ ಉತ್ತರ ನೀಡುವೆ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಮಾಜಿ ಸಚಿವ ಮುರುಗೇಶ‌‌ ನಿರಾಣಿ ಅವರಿಗೆ ತಿರುಗೇಟು ನೀಡಿದ್ದಾರೆ.

ನಿರಾಣಿ ಅವರು ಬಾಗಲಕೋಟೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ವಿರುದ್ಧ ನೀಡಿರುವ ಹೇಳಿಕೆಗೆ ಸಚಿವರು ತಮ್ಮ ಎಕ್ಸ್ ಜಾಲತಾಣದಲ್ಲಿ ಭಾನುವಾರ ಪ್ರತಿಯುತ್ತರ ನೀಡಿದ್ದಾರೆ.

ಎಕ್ಸ್ ನಲ್ಲಿ ಸಚಿವರು ಬರೆದುಕೊಂಡಿರುವ ಪೂರ್ಣ ಪಾಠ ಇಲ್ಲಿದೆ.

‘ಮಿ. ಮುರುಗೇಶ ನಿರಾಣಿ ಬಾಗಲಕೋಟೆಯಲ್ಲಿ ನೀನು ಮಾಡಿರುವ ಪತ್ರಿಕಾಗೋಷ್ಠಿಯನ್ನು ಗಮನಿಸಿದ್ದೇನೆ. ಸಿದ್ದಾರ್ಥ ವಿಹಾರ ಟ್ರಸ್ಟ್ ಗೆ ಯಾವುದೇ ರಿಯಾಯಿತಿ ಇಲ್ಲದೆ ಸಿ.ಎ ನಿವೇಶನ ನೀಡಿದ್ದರೂ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ಹೆಸರನ್ನು ಅನವಶ್ಯಕವಾಗಿ ಎಳೆದು ತಂದು ಹಗರಣವಾಗಿದೆ ಎಂದು ಬಿಜೆಪಿ ಅವರು ಬಿಂಬಿಸುತ್ತಿರುವುದಕ್ಕೆ ಪ್ರತಿಯಾಗಿ ನಾನು ಪತ್ರಿಕಾಗೋಷ್ಠಿ ನಡೆಸಿ, ಬಿಜೆಪಿ ಅವಧಿಯಲ್ಲಿ ಬಿಜೆಪಿ ನಾಯಕರು ಯಾರು ಯಾರು ಎಷ್ಟೆಷ್ಟು ಲಾಭ ಪಡೆದಿದ್ದಾರೆ ಎಂಬುದು ತಿಳಿಸುವದು ನನ್ನ ಉದ್ದೇಶವಾಗಿತ್ತು. ಈ ಸಂದರ್ಭದಲ್ಲಿ ಮಿ. ನಿರಾಣಿ ತನ್ನ ಶಿಕ್ಷಣ ಸಂಸ್ಥೆ ಮತ್ತು ಸಕ್ಕರೆ ಕಾರ್ಖಾನೆಗೆ ಪಡೆದಿರುವ ಲಾಭದ ಮಾಹಿತಿಯನ್ನು ನೀಡಿದ್ದೇನೆ.
ಆದರೆ, “ದನಕಾಯುವವನು” ಎಂಬ ಶಬ್ದವನ್ನು ನಾನು ಎಲ್ಲಿಯೂ ಬಳಸಿಲ್ಲ ಮತ್ತು ಏಕವಚನದಲ್ಲೂ ನಾನು ಮಾತನಾಡಿಲ್ಲ. ಅಷ್ಟಕ್ಕೂ, ದನಕಾಯುವುದು ಗೌರವದ ಕಾಯಕ. ದನಕಾಯುವವರನ್ನು ನಾನು ಗೌರವಿಸುತ್ತೇನೆ. ಮಿ. ನಿರಾಣಿ ತಾನಾಗಿಯೇ “ದನಕಾಯುವವ” ಎಂದು ತಿಳಿದುಕೊಂಡು, ನನ್ನ ಸಂಸ್ಥೆ ಮತ್ತು ನನ್ನ ಕುರಿತು ಏಕವಚನದಲ್ಲಿ ಕೆಟ್ಟ ಭಾಷೆ ಬಳಸಿದ್ದಾನೆ. ನಾನು ವಿಜಯಪುರ ಜಿಲ್ಲೆಯವ. ಇಂಥಹ ಎಲ್ಲ ಭಾಷೆಗಳು ನನಗೂ ಬರುತ್ತವೆ. ನಾನೇ ಸ್ವತಃ ಬಾಗಲಕೋಟೆಗೆ ಬಂದು ನಿನ್ನ ಭಾಷೆಯಲ್ಲಿಯೇ ನಿನ್ನ ಸತ್ಯಾಂಶವನ್ನು ಬಿಚ್ಚಿಡುತ್ತೇನೆ.

‘ಅನವಶ್ಯಕವಾಗಿ ನನ್ನ ತಂಟೆಗೆ ಬಂದವರಿಗೆ ಹಿಂದೆಯೂ ಬಿಟ್ಟಿಲ್ಲ, ಇಂದು ಮತ್ತು ಮುಂದೆಯೂ ಬಿಡುವುದಿಲ್ಲ. ಅದರ ಕಹಿ ಅನುಭವ ಈ ಹಿಂದೆ ನಿನಗೆ ಆಗಿದೆ ಎನ್ನುವುದನ್ನು ನೆನಪಿಸುತ್ತೇನೆ’.

Comments (0)

Your email address will not be published. Required fields are marked *

Back to top button