Top Newsರಾಜಕೀಯರಾಜ್ಯಸುದ್ದಿ

ಗ್ರೇಟರ್ ಬೆಂಗಳೂರು ವಿಧಯೇಕ ವಿರೋಧಿಸಿ ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ಗ್ರೇಟರ್ ಬೆಂಗಳೂರು ಹೆಸರಿನಲ್ಲಿ ಛಿದ್ರ ಛಿದ್ರ ಮಾಡಲು ಸರ್ಕಾರ ಹೊರಟಿದೆ ಎಂದು ಆರೋಪಿಸಿ, ಗ್ರೇಟರ್ ಬೆಂಗಳೂರು ವಿಧೇಯಕವನ್ನು ವಿರೋಧಿಸಿ ನಗರದಲ್ಲಿ ಜೆಡಿಎಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜೆಡಿಎಸ್​​ನ ಬೆಂಗಳೂರು ನಗರ ಘಟಕದ ಅಧ್ಯಕ್ಷ, ಮಾಜಿ ಶಾಸಕ ಹೆಚ್.ಎಂ. ರಮೇಶ್ ಗೌಡ ನೇತೃತ್ವದಲ್ಲಿ ಫ್ರೀಡಂ ಪಾರ್ಕ್​​ನಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಜವರಾಯಿಗೌಡ, ಮಾಜಿ ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ ಸೇರಿದಂತೆ ಮುಖಂಡರು, ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ರಮೇಶ್ ಗೌಡ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವಾಯಿತು. ಅಧಿಕಾರಕ್ಕೆ ಬಂದಾಗಿನಿಂದಲೂ ಜನವಿರೋಧಿ ನೀತಿ ಆನುಸರಿಸುತ್ತಿದೆ. ಪ್ರತಿದಿನ ಜನರಿಗೆ ನರಕ ತೋರಿಸುತ್ತಿದ್ದಾರೆ. ಕೆಂಪೇಗೌಡರು ನಿರ್ಮಾಣ ಮಾಡಿದ ಬೆಂಗಳೂರನ್ನು ಛಿದ್ರ ಛಿದ್ರ ಮಾಡಲು ಹೊರಟಿದ್ದಾರೆ. ಐದು ಗ್ಯಾರಂಟಿಗಳನ್ನು ನೀಡಿ ಸುಳ್ಳು ಭರವಸೆಗಳನ್ನು ಕೊಡುತ್ತಿದ್ದಾರೆ ಎಂದು ಟೀಕಿಸಿದರು.

ರಾಜ್ಯಪಾಲರಿಗೆ ಮನವಿ ಸಲ್ಲಿಸುತ್ತೇವೆ: ಗ್ರೇಟರ್ ಬೆಂಗಳೂರು ವಿಧೇಯಕ ತಂದಿದ್ದಾರೆ. ರಾಜ್ಯಪಾಲರು ಯಾವುದೇ ಕಾರಣಕ್ಕೂ ವಿಧೇಯಕಕ್ಕೆ ಸಹಿ ಮಾಡಬಾರದು. ಈ ಬಗ್ಗೆ ನಾವು ಜೆಡಿಎಸ್ ವತಿಯಿಂದ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸುತ್ತೇವೆ. ಗ್ರೇಟರ್ ಬೆಂಗಳೂರು ವಿಧೇಯಕವನ್ನು ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ ಅವರು, ವಿಧೇಯಕವನ್ನು ವಾಪಸ್ ಪಡೆಯದಿದ್ದರೆ ಮುಖ್ಯಮಂತ್ರಿಗಳು, ಡಿಸಿಎಂ ಹಾಗೂ ಸಚಿವರ ಕಾರ್ಯಕ್ರಮಗಳಲ್ಲಿ ನಾವು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಹಾಲಿನ ದರ ಹೆಚ್ಚಳಕ್ಕೆ ಹುನ್ನಾರ: ಇದೇ ವೇಳೆ, ಹಾಲಿನ ದರವನ್ನು ಹೆಚ್ಚಳ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿದರು. ಇದೇ ವೇಳೆ, ವಿಧಾನಸೌಧ ಮುತ್ತಿಗೆ ಹಾಕಲು ಹೊರಟ ಜೆಡಿಎಸ್ ಮುಖಂಡರು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಸ್​​ನಲ್ಲಿ ಕರೆದೊಯ್ದರು.

Comments (0)

Your email address will not be published. Required fields are marked *

Back to top button