Freedom TV

ಲೋಕೋಪಯೋಗಿ ಇಲಾಖೆ ದಕ್ಷಿಣ ವಲಯದ ನೂತನ ಮುಖ್ಯ ಅಭಿಯಂತರಾಗಿ ಕೆ. ಸಿ. ಸತೀಶ್ ಅಧಿಕಾರ ಸ್ವೀಕಾರ

ಬೆಂಗಳೂರು: ರಾಜ್ಯ ಲೋಕೋಪಯೋಗಿ ಇಲಾಖೆಯ (PWD) ಸಂಪರ್ಕ ಮತ್ತು ಕಟ್ಟಡ ವಿಭಾಗದ ದಕ್ಷಿಣ ವಲಯಕ್ಕೆ ನೂತನ ಸಾರಥಿಯಾಗಿ ಕೆ. ಸಿ. ಸತೀಶ್ ಅವರು ಇಂದು ಅಧಿಕೃತವಾಗಿ ಪದಗ್ರಹಣ ಮಾಡಿದರು.

ನಗರದ ಕೆ. ಆರ್. ಸರ್ಕಲ್ ಬಳಿ ಇರುವ ಲೋಕೋಪಯೋಗಿ ಇಲಾಖೆಯ ಮುಖ್ಯ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅಭಿಯಂತರಾಗಿ (Chief Engineer) ಅಧಿಕಾರವನ್ನು ವಹಿಸಿಕೊಂಡರು. ಈ ಸಂದರ್ಭದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸತೀಶ್ ಅವರಿಗೆ ಹೂಗುಚ್ಛ ನೀಡಿ, ಆತ್ಮೀಯವಾಗಿ ಬರಮಾಡಿಕೊಂಡು ಶುಭ ಕೋರಿದರು.

ಅಧಿಕಾರ ಸ್ವೀಕರಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೆ. ಸಿ. ಸತೀಶ್ ಅವರು ಸರ್ಕಾರದ ನಿರ್ಧಾರಕ್ಕೆ ಕೃತಜ್ಞತೆ ಸಲ್ಲಿಸಿದರು. “ಸರ್ಕಾರ ನನ್ನ ಮೇಲೆ ನಂಬಿಕೆಯಿಟ್ಟು ದಕ್ಷಿಣ ವಲಯದ ಮುಖ್ಯ ಎಂಜಿನಿಯರ್ ಆಗಿ ಜವಾಬ್ದಾರಿ ನೀಡಿದೆ. ಇಲಾಖೆಯ ಘನತೆ ಎತ್ತಿ ಹಿಡಿಯುವ ನಿಟ್ಟಿನಲ್ಲಿ ಮತ್ತು ಯಾವುದೇ ಕಪ್ಪು ಚುಕ್ಕೆ ಬಾರದಂತೆ ಅತ್ಯಂತ ಪ್ರಾಮಾಣಿಕವಾಗಿ ಹಾಗೂ ದಕ್ಷತೆಯಿಂದ ಸೇವೆ ಸಲ್ಲಿಸುತ್ತೇನೆ,” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ದಕ್ಷಿಣ ವಲಯದ ವ್ಯಾಪ್ತಿಗೆ ಬರುವ ರಸ್ತೆ ಮತ್ತು ಕಟ್ಟಡ ಕಾಮಗಾರಿಗಳ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡುವುದಾಗಿ ಅವರು ಇದೇ ವೇಳೆ ತಿಳಿಸಿದರು. ಹೊಸ ಸಾರಥಿಯ ನೇಮಕದಿಂದ ಇಲಾಖೆಯ ಕಾರ್ಯಚಟುವಟಿಕೆಗಳಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆಯಿದೆ.

Comments (0)

Your email address will not be published. Required fields are marked *

Back to top button