Freedom TV

ಕುತೂಹಲ ಮೂಡಿಸಿದ ಡಿವಿಎಸ್ ನಡೆ!

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಸಿಎಂ ಡಿವಿ ಸದಾನಂದ ಗೌಡ ರಾಜ್ಯ ಒಕ್ಕಲಿಗ ಸಂಘದ ಪ್ರಮುಖರ ಜೊತೆ ಸಭೆ ನಡೆಸಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯ ಕಿಮ್ಸ್ ನಲ್ಲಿ ನಡೆದ ಸಭೆಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರ ಜೊತೆ ಚರ್ಚೆ ನಡೆಸಿದ್ದಾರೆ. ಟಿಕೆಟ್ ಕೈ ತಪ್ಪಿರುವ ಹಿನ್ನೆಲೆಯಲ್ಲಿ ಮುಂದಿನ ನಿಲುವಿನ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಬಳಿಕ ಮಾತನಾಡಿದ ಅವರು, ಒಕ್ಕಲಿಗರ ಸಂಘದ ಅಧ್ಯಕ್ಷರು, ನಿರ್ದೇಶಕರ ಜತೆ ಸಭೆ ನಡೆಸಿದ್ದೇನೆ. ಒಂದಷ್ಟು ವಿಚಾರಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಈಗ ಯಾವುದನ್ನೂ ನಾನು ಹೇಳಲ್ಲ, ಬುಧವಾರ ಸುದ್ದಿಗೋಷ್ಟಿ ಕರೆಯುತ್ತೇನೆ. ನಾಳೆಯೇ ಎಲ್ಲವನ್ನೂ ವಿವರಿಸುತ್ತೇನೆ ಎಂದರು.
ಸಭೆ ಬಳಿಕ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ ಮಾತನಾಡಿ, ನಮ್ಮ ಒಕ್ಕಲಿಗ ಸಮುದಾಯಕ್ಕೆ ಮೂರೂ ಪಕ್ಷಗಳಲ್ಲಿ ಟಿಕೆಟ್ ಕೊಡುವಲ್ಲಿ ಅನ್ಯಾಯ ಆಗಿದೆ. ಬಿಜೆಪಿಯಲ್ಲಿ ಲಿಂಗಾಯತ ಸಮುದಾಯಕ್ಕೆ ಎಂಟು ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯಕ್ಕೆ ಎರಡೇ ಟಿಕೆಟ್ ಕೊಡಲಾಗಿದೆ.ಒಕ್ಕಲಿಗ ಸಮುದಾಯಕ್ಕೂ ಎಂಟು ಕಡೆ ಟಿಕೆಟ್ ಕೊಡಬೇಕು ಎಂದು ಒತ್ತಾಯಿಸಿದರು.

ಬಿಜೆಪಿಯಲ್ಲಿ ಸಿಟಿ ರವಿ, ಪ್ರತಾಪ್ ಸಿಂಹಗೆ ಟಿಕೆಟ್ ಕೊಟ್ಟಿಲ್ಲ.ಸದಾನಂದ ಗೌಡರು ಏನೇ ನಿರ್ಧಾರ ತಗೊಂಡ್ರೂ ನಮ್ಮ ಬೆಂಬಲ ಇರುತ್ತದೆ. ನಾಳೆ ಅವರೇ ಸುದ್ದಿಗೋಷ್ಟಿ ಮಾಡಿ ಎಲ್ಲ ಹೇಳ್ತಾರೆ. ನಮ್ಮ ಸಮುದಾಯಕ್ಕೆ ಅನ್ಯಾಯ ಆದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಡಿವಿ ಸದಾನಂದ ಗೌಡ ಅವರು ತಮ್ಮ ಮುಂದಿನ ಹೆಜ್ಜೆಯನ್ನು ಘೋಷಣೆ ಮಾಡುವ ನಿಟ್ಟಿನಲ್ಲಿ ಇಂದು ಪತ್ರಿಕಾಗೋಷ್ಠಿಯನ್ನು ಕರೆದಿದ್ದರು. ಆದರೆ ಕೊನೆಯ ಗಳಿಗೆಯಲ್ಲಿ ಅದು ರದ್ದಾಗಿತ್ತು. ವರಿಷ್ಠರಿಂದ ಬಂದ ಸೂಚನೆಯ ಹಿನ್ನೆಲೆಯಲ್ಲಿ ರದ್ದಾಗಿದೆ ಎನ್ನಲಾಗಿದೆ. ಆದರೆ ಇದೀಗ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಮುಂದಿನ ನಿಲುವು ತಿಳಿಸುವುದಾಗಿ ಹೇಳಿದ್ದಾರೆ‌. ಸಹಜವಾಗಿ ಕುತೂಹಲಕ್ಕೆ ಕಾರಣವಾಗಿದೆ

Comments (0)

Your email address will not be published. Required fields are marked *

Back to top button