ಬೆಂಗಳೂರು: ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗಳಿಗೆ ರೈಲು ಪ್ರಯಾಣಕ್ಕೆ ಈಗ ಸುಮಾರು 14 ಗಂಟೆಗಳ ಕಾಲ ಹಿಡಿಸುತ್ತಿದ್ದು, ಇದನ್ನು 10 ಗಂಟೆಗಳಿಗೆ ಇಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರೈಲ್ವೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ. ಇದರಿಂದಾಗಿ, ವಾಯವ್ಯ ಕರ್ನಾಟಕದ ಜನರು ಬೆಂಗಳೂರಿಗೆ ಬಂದುಹೋಗಲು ಅನುಕೂಲವಾಗಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ.
ರೈಲು ಪ್ರಯಾಣವನ್ನು ಅನುಕೂಲಕರ ಮತ್ತು ಸುಖದಾಯಕವನ್ನಾಗಿ ಮಾಡಲು ಹಾಗೂ ಮಂದಗತಿಯಲ್ಲಿ ಸಾಗುತ್ತಿರುವ ವೆಚ್ಚ ಹಂಚಿಕೆಯ 9 ರೈಲು ಯೋಜನೆಗಳ ಸ್ಥಿತಿಗತಿ ಬಗ್ಗೆ ಚರ್ಚಿಸಲು ಖನಿಜ ಭವನದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಮತ್ತು ನೈರುತ್ಯ ರೈಲ್ವೆ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು.
ಬಳಿಕ ಮಾತನಾಡಿದ ಅವರು, ಬೆಂಗಳೂರು- ವಿಜಯಪುರ ನಡುವಿನ 660 ಕಿ.ಮೀ ರೈಲು ಪ್ರಯಾಣಕ್ಕೆ ಈಗ ಸುಮಾರು 14 ಗಂಟೆ ಸಮಯ ಹಿಡಿಸುತ್ತಿದೆ. ಬೆಂಗಳೂರಿನಿಂದ ಹೊರಡುವ ರೈಲುಗಳು ಈಗ ಹುಬ್ಬಳ್ಳಿ ನಿಲ್ದಾಣಕ್ಕೆ ಹೋಗುತ್ತಿದ್ದು, ಅಲ್ಲಿ ಎಂಜಿನ್ ಬದಲಿಸಲು 45 ನಿಮಿಷ ನಿಲ್ಲುತ್ತವೆ. ಬಳಿಕ, ಗದಗದಲ್ಲೂ ಹೀಗೆಯೇ ಸಮಯ ವ್ಯರ್ಥವಾಗುತ್ತಿದೆ. ಆದ್ದರಿಂದ, ರೈಲುಗಳು ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಹೋಗುವ ಬದಲು ಹುಬ್ಬಳ್ಳಿ (ದಕ್ಷಿಣ) ನಿಲ್ದಾಣ ಬೈಪಾಸ್ ಮತ್ತು ಗದಗ ಬೈಪಾಸ್ ಮೂಲಕ ಸಾಗುವ ವ್ಯವಸ್ಥೆ ಮಾಡಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದು ಅವರು ಸೂಚಿಸಿದರು.
ಈಗಾಗಲೇ ಬೆಂಗಳೂರು-ಹುಬ್ಬಳ್ಳಿ-ಬಾಗಲಕೋಟೆ ನಡುವೆ ಜೋಡಿ ಹಳಿ ಇದೆ. ಬಾಗಲಕೋಟೆ-ವಿಜಯಪುರ ಮಧ್ಯೆ ಆಲಮಟ್ಟಿಯವರೆಗೂ ದ್ವಿಪಥ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದ್ದು, ಈ ವರ್ಷದ ಸೆಪ್ಟೆಂಬರ್ ಹೊತ್ತಿಗೆ ಮುಗಿಯಲಿದೆ. ಇಲ್ಲಿ ಆಲಮಟ್ಟಿ-ವಂಡಾಳ್ ಮಧ್ಯೆ 9 ಕಿ.ಮೀ. ಮಾತ್ರ ಕಾಮಗಾರಿ ಬಾಕಿ ಉಳಿದಿದ್ದು, ಇಲ್ಲಿ ಸೇತುವೆ ಕಾಮಗಾರಿ ನಡೆಯಬೇಕಿದೆ. ಇದನ್ನು 2025ರ ಆಗಸ್ಟ್ ವೇಳೆಗೆ ಪೂರ್ಣಗೊಳಿಸಲಾಗುವುದು. ಜೊತೆಗೆ, ಇನ್ನು ಎರಡು ತಿಂಗಳಲ್ಲಿ ಈ ಮಾರ್ಗದಲ್ಲಿ ಬಾಕಿ ಇರುವ ವಿದ್ಯುದೀಕರಣ ಕೂಡ ಮುಗಿಯಲಿದೆ ಎಂದು ಅವರು ವಿವರಿಸಿದರು.
ಈ ಕ್ರಮಗಳ ಜೊತೆಗೆ ಬೆಂಗಳೂರಿನಿಂದ ವಿಜಯಪುರ, ಬಾಗಲಕೋಟೆಗಳಿಗೆ ವಿಶೇಷ ರೈಲುಗಳನ್ನು ಓಡಿಸಬೇಕಾದ ಅಗತ್ಯವಿದೆ. ಮಿಗಿಲಾಗಿ, ವಿದ್ಯುದೀಕರಣ ಕಾಮಗಾರಿ ಮುಗಿದರೆ ವಿಜಯಪುರ, ಬಾಗಲಕೋಟೆಗಳಿಗೆ `ವಂದೇ ಭಾರತ್’ ಎಕ್ಸಪ್ರೆಸ್ ರೈಲು ಸೇವೆ ಆರಂಭಿಸುವಂತೆ ರೈಲ್ವೆ ಮಂಡಳಿಯನ್ನು ಕೋರಲಾಗುವುದು ಎಂದು ಪಾಟೀಲ ತಿಳಿಸಿದರು.