ರಾಜಕೀಯರಾಜ್ಯಸುದ್ದಿ

​ಬೆಳಗಾವಿ ಪುತ್ರ ಮೃಣಾಲ್​ಗೆ ಆಶೀರ್ವಾದ ಮಾಡಿ : ಲಕ್ಷ್ಮೀ ಹೆಬ್ಬಾಳ್ಕರ್​

​ಬೆಳಗಾವಿ : ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬೆಳಗಾವಿ ಪುತ್ರ, ಲೋಕಲ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಗೆ ಆಶೀರ್ವಾದ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮನವಿ ಮಾಡಿಕೊಂಡರು.

​ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭೆ ಕ್ಷೇತ್ರಗಳು ಇಡೀ ದೇಶದ ಗಮನ ಸೆಳೆದಿವೆ. ಯಾಕೆಂದರೆ ಇಲ್ಲಿ ಕಾಂಗ್ರೆಸ್ ಯುವಕರಿಗೆ ಅವಕಾಶ ಮಾಡಿಕೊಟ್ಟಿದೆ. ಸತೀಶ ಜಾರಕಿಹೊಳಿ, ​ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ​ ಸೇರಿದಂತೆ ಜಿಲ್ಲೆಯ ಎಲ್ಲ ನಾಯಕರ ಆಶೀರ್ವಾದದಿಂದ ನನ್ನ ಪುತ್ರನಿಗೆ ಟಿಕೆಟ್ ಸಿಕ್ಕಿದ್ದು, ಇವರಿಗೆಲ್ಲಾ ನಾನು ಚಿರಋಣಿ ಆಗಿರುತ್ತೇನೆ. ಇನ್ನು ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳನ್ನು ಖಂಡಿತವಾಗಲೂ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳುತ್ತೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಗ್ಯಾರಂಟಿ ಯೋಜನೆಗಳಿಂದ ತಮಗೆ ಉಪಯೋಗ ಆಗಿದೆಯೋ ಇಲ್ಲ​ವೋ ಎಂದು ನೆರೆದಿದ್ದ ಮಹಿಳೆಯರನ್ನು ಕಾರ್ಯಕ್ರಮದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದಾಗ ಕೈ ಮೇಲೆ ಎತ್ತಿ ನಮಗೆ ಉಪಯೋಗ ಆಗಿದೆ ಎಂಬ ಉತ್ತರ ಮಹಿಳೆಯರಿಂದ ಕೇಳಿ ಬಂತು. ಇಡೀ ವಿಶ್ವದ​ಲ್ಲೇ ಜನರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆ ಕೊಟ್ಟಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ಎರಡನೇ ರಾಜಧಾನಿ ಬೆಳಗಾವಿ ಅಭಿವೃದ್ಧಿ ಬಗ್ಗೆ ದೆಹಲಿಯಲ್ಲಿ ಗಟ್ಟಿಯಾಗಿ ಧ್ವನಿ ಎತ್ತುವ ಸಂಸದರ ಅವಶ್ಯಕತೆಯಿದೆ. ಬೆಳಗಾವಿಗೆ ಏನಾದರೂ ಮಾಡಬೇಕು ಎಂಬ ತುಡಿತ ಹೊಂದಿರುವ ಯುವಕ ಮೃಣಾಲ್ ಗೆ ಆಶೀರ್ವಾದ ಮಾಡಬೇಕು. ಬೆಳಗಾವಿ ಜಿಲ್ಲೆ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಇಲ್ಲಿ ಅಷ್ಟೊಂದು ಅಭಿವೃದ್ಧಿ ಆಗಿಲ್ಲ. ಇದಕ್ಕೆ ಅನುದಾನ ತೆಗೆದುಕೊಂಡು ಬರುವಷ್ಟು ಇಚ್ಛಾಶಕ್ತಿ ಹೊಂದಿರುವ ಸಂಸದರು ಇರಲಿಲ್ಲ. ನಾನು ಹೇಗೆ ಕೆಲಸ ಮಾಡುತ್ತೆನೋ ಅದೇ ರೀತಿ ನನ್ನ ಪುತ್ರ ಕೂಡ ಒಳ್ಳೆಯ ಕೆಲಸ ಮಾಡುವ ಮೂಲಕ ಜನರ ಮನಸ್ಸನ್ನು ಗೆಲ್ಲುತ್ತಾನೆ ಎಂದರು.

ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಮಾತನಾಡಿ, ಯುವಕರೇ ಈ ದೇಶದ ಆಸ್ತಿ, ಭವಿಷ್ಯ ಎಂದು ಬೆಳಗಾವಿಯಲ್ಲಿ ನನಗೆ ಮತ್ತು ಚಿಕ್ಕೋಡಿಯಲ್ಲಿ ಸಹೋದರಿ ಪ್ರಿಯಾಂಕಾಗೆ ಪಕ್ಷದ ವರಿಷ್ಠರು ಅವಕಾಶ ಮಾಡಿಕೊಟ್ಟಿದ್ದಾರೆ. ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ನಮ್ಮ ಕಾಂಗ್ರೆಸ್ ಸರ್ಕಾರ ತಲುಪಿಸಿದೆ. ಇದರಿಂದ ಜನ ತುಂಬಾ ಖುಷಿಯಲ್ಲಿದ್ದಾರೆ. ನನಗೊಂದು ಸುವರ್ಣಾವಕಾಶ ಸಿಕ್ಕಿದ್ದು, ದಯವಿಟ್ಟು ನನಗೆ ನೀವು ಆಶೀರ್ವಾದ ಮಾಡಬೇಕು ಎಂದು ಕೇಳಿಕೊಂಡರು.

Comments (0)

Your email address will not be published. Required fields are marked *

Back to top button