ಹುಬ್ಬಳ್ಳಿ : ದಿಂಗಾಲೇಶ್ವರ ಸ್ವಾಮೀಜಿಗಳಿಗೆ ತಪ್ಪು ಗ್ರಹಿಕೆ ಆಗಿರಬಹುದು. ಯಾವುದೇ ಕಾರಣಕ್ಕೂ ಧಾರವಾಡ ಲೋಕಸಭೆ ಕ್ಷೇತ್ರದಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲ. ಅವರೊಂದಿಗೆ ಖುದ್ದಾಗಿ ಮಾತನಾಡಿ, ಮನವರಿಕೆ ಮಾಡಿಕೊಡುವ ಕೆಲಸ ಮಾಡುವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಶ್ರೀಗಳು ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪ್ರಲ್ಹಾದ್ ಜೋಶಿ ಬದಲಾವಣೆ ಮಾಡಬೇಕು ಎಂದು ಬಿಜೆಪಿ ನಾಯಕರಿಗೆ ಗಡುವು ನೀಡಿದ್ದಾರೆ. ನಾನು ಈ ಹಿಂದೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಲ್ಲಿ ಪ್ರಹ್ಲಾದ್ ಜೋಶಿ ಅವರ ಕೈವಾಡವಿಲ್ಲ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಈ ಬಗ್ಗೆ ದಿಂಗಾಲೇಶ್ವರ ಶ್ರೀಗಳೊಂದಿಗೆ ಮಾತುಕತೆ ನಡೆಸುತ್ತೇನೆ ಎಂದರು.
ಪ್ರಹ್ಲಾದ್ ಜೋಶಿ ಎಲ್ಲ ಸಮುದಾಯವನ್ನು ಒಟ್ಟಿಗೆ ತಗೊಂಡು ಹೋಗುವ ನಾಯಕರು. ಅಲ್ಲದೇ ಅವರ ನಾಯಕತ್ವ ದೇಶ ನೋಡುತ್ತಿದೆ. ಇದೀಗ ಮಠಾಧಿಪತಿಗಳಿಗೆ ತಪ್ಪು ಗ್ರಹಿಕೆ ಆಗಿದೆ. ಅವರ ಮನವೊಲಿಸುವ ಕೆಲಸ ಮಾಡುತ್ತೇನೆ ಎಂದರು. ಈಗಾಗಲೇ ದಾವಣಗೆರೆಗೆ ಹೋಗಿ ಅಲ್ಲಿನ ಅಸಮಾಧಾನ ಪರಿಹರಿಸಿದ್ದೇನೆ. ಅದರಂತೆ ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಅವರ ವಿರುದ್ಧದ ಅಸಮಾಧಾನ ಪರಿಹರಿಸಲಾಗಿದೆ. ಪಕ್ಷದಲ್ಲಿ ಕೆಲವು ಗೊಂದಲವಿರೋದು ನಿಜ. ಆದರೆ ಅವೆಲ್ಲವನ್ನೂ ಪರಿಹರಿಸಿಕೊಂಡು, ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರದಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರ ಬಿಟ್ಟು ಉಳಿದೆಲ್ಲ, ಕ್ಷೇತ್ರಕ್ಕೆ ಟಿಕೆಟ್ ಹಂಚಿಕೆಯಾಗಿದೆ. ಬಿಜೆಪಿ, ಜೆಡಿಎಸ್ ಪರವಾದ ವಾತಾವರಣ ರಾಜ್ಯದಲ್ಲಿದೆ. ಕಾಂಗ್ರೆಸ್ ಕೇವಲ ಗ್ಯಾರಂಟಿ ಬಗ್ಗೆ ಮಾತನಾಡಿ ವಿಫಲವಾಗಿದೆ. ಕಾಂಗ್ರೆಸ್ ರೈತ ವಿರೋಧಿ, ದಲಿತ ವಿರೋಧಿ ಸರ್ಕಾರವಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಎಸ್ ಯಡಿಯೂರಪ್ಪ ಹರಿಹಾಯ್ದರು.