ಹುಬ್ಬಳ್ಳಿ: ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ, ಜಗದೀಶ್ ಶೆಟ್ಟರ್ ವಾಪಸ್ ಮತ್ತೆ ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಇದೀಗ ಈ ಸುದ್ದಿಗೆ ಖಡಕ್ ಸ್ಪಷ್ಟನೆ ನೀಡಿದ್ದಾರೆ. ಇದರೊಂದಿಗೆ ಎಲ್ಲಾ ಅಂತೆ-ಕಂತೆಗಳಿಗೆ ತೆರೆ ಎಳೆದಿದ್ದಾರೆ.
ವಿಧಾನಸಭೆ ಚುನಾವಣೆಯ ಟಿಕೆಟ್ ಸಿಗದಿದ್ದಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ಸಿಡಿದೆದ್ದು ಕಾಂಗ್ರೆಸ್ ಸೇರಿದ್ದು, ಇದೀಗ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅವರು ಮತ್ತೆ ವಾಪಸ್ ಬಿಜೆಪಿಗೆ ವಾಪಸ್ ಆಗಲಿದ್ದಾರೆ ಎನ್ನುವ ಸುದ್ದಿಗ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಇದೀಗ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿ, ನನ್ನನ್ನು ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂಬುದು ಹಲವು ನಾಯಕರ ಒತ್ತಾಸೆ. ಆದ್ರೆ ಘರ್ ವಾಪ್ಸಿ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದರು.
ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಶೆಟ್ಟರ್, ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂದು ಹಲವು ನಾಯಕರ ಒತ್ತಾಸೆಯಾಗಿದೆ. ನನಗೆ ಆಗಿರೋ ಅಪಮಾನವನ್ನು ನಾನು ಇನ್ನೂ ಮರೆತಿಲ್ಲ. ನಾನು ಬಿಜೆಪಿ ತೊರೆದ ನಂತರ ಆಗಿರುವ ಹಾನಿ ಬಗ್ಗೆ ಅವರಿಗೆ ಮನವರಿಕೆಯಾಗಿದೆ. ಈ ನಿಟ್ಟಿನಲ್ಲಿ ಕೆಲವರು ನನ್ನನ್ನು ವಾಪಸ್ ಕರೆತರುವ ಪ್ರಯತ್ನದಲ್ಲಿ ಇದ್ದಾರೆ. ಆದರೆ ಹಲವಾರು ನಾಯಕರು ವಾಪಸ್ ತರುವಂತೆ ಒತ್ತಡ ಹಾಕ್ತಿರೋ ಮಾಹಿತಿ ಇದೆ. ಯಾರು ಏನೇ ಪ್ರಯತ್ನ ಮಾಡಿದರೂ ನಾನು ಬಿಜೆಪಿಗೆ ವಾಪಾಸ್ಸಾಗಲ್ಲ. ಯಾವುದೇ ಕಾರಣಕ್ಕೂ ನಾನು ಬಿಜೆಪಿಗೆ ಮತ್ತೆ ವಾಪಸಾಗುವುದಿಲ್ಲ. ಘರ್ ವಾಪ್ಸಿ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.