Freedom TV

ಕಾಂಗ್ರೆಸ್ ಪಕ್ಷದಿಂದ ಮಾತ್ರ ಬಡವರ ಅಭಿವೃದ್ಧಿ ಸಮಾವೇಶದಲ್ಲಿ ಹೆಬ್ಬಾಳ್ಕರ್ ಅಬ್ಬರ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಸದಾ ಬಡವರ ಪರ. ಬಡವರ ಬಗ್ಗೆ ಕಾಳಜಿ ಏಕ ಮಾತ್ರ ಪಕ್ಷ ಅದು ಕಾಂಗ್ರೆಸ್ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಕೆ.ಜಿ.ಹಳ್ಳಿಯಲ್ಲಿ ಸೋಮವಾರ ನಡೆದ ಟೆಕಲ್ ಹೋಬಳಿ ಮಟ್ಟದ ಗ್ಯಾರಂಟಿ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಅಂಗನವಾಡಿ, ಆಶಾ‌ ಕಾರ್ಯಕರ್ತೆಯರ ಶ್ರಮದಿಂದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ ಎಂದರು. ಗ್ಯಾರಂಟಿ ಸಮಾವೇಶಗಳನ್ನ ನಾವು ಕಾಟಾಚಾರಕ್ಕೆ, ಕೇವಲ ಹೆಸರಿಗಾಗಿ ಮಾಡುತ್ತಿಲ್ಲ. ಯೋಜನೆಗಳು ಯಾರಿಗೆ ತಲುಪಲಿಲ್ಲ ಎಂದು ತಿಳಿದುಕೊಂಡು ಅವುಗಳನ್ನು ಎಲ್ಲರಿಗೂ ತಲುಪಿಸುವ ಉದ್ದೇಶಕ್ಕಾಗಿ ಸಮಾವೇಶ ಮಾಡಲಾಗುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಮಹಿಳೆಯರ ಏಳಿಗೆಗೆ ಕೆಲಸ ಮಾಡುತ್ತಿದೆ. ಬಿಜೆಪಿಯವರ ರೀತಿ ಬರೀ ಮಾತನಾಡದೆ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ. ಐದು ಗ್ಯಾರಂಟಿಗಳ ಪೈಕಿ ನನ್ನ ಇಲಾಖೆಗೆ ಸಂಬಂಧಿಸಿದ ಗೃಹಲಕ್ಷ್ಮಿಗಾಗಿ ಮಾಲೂರಿನ ತಾಲೂಕಿನಲ್ಲಿ ಪ್ರತಿ ತಿಂಗಳು 10 ಕೋಟಿ ವ್ಯಯಿಸಲಾಗುತ್ತಿದೆ ಎಂದು ಹೇಳಿದರು.

ಸ್ವಾರ್ಥಕ್ಕೋಸ್ಕರ ಗ್ಯಾರಂಟಿ ಯೋಜನೆಗಳನ್ನು ತಂದಿಲ್ಲ. ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂದು ಬಿಜೆಪಿ ಯವರು ಅಪಪ್ರಚಾರ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸಲ್ಲ ಎಂದು ಸಚಿವರು ಭರವಸೆ ನೀಡಿದರು.
ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕಿಡಿಕಾರಿದರು.

ಬಿಜೆಪಿ 400 ಸೀಟುಗಳನ್ನು ಗೆದ್ದರೆ ಭಾರತದ ಸಂವಿಧಾನವನ್ನು ಬದಲಿಸುವುದಾಗಿ ಹೇಳಿರುವ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಸಚಿವೆ ಕಿಡಿ ಕಾರಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದಲೇ ಸ್ಥಳೀಯ ಬಿಜೆಪಿ ಸಂಸದ ಮುನಿಸ್ವಾಮಿ ಲೋಕಸಭೆಗೆ ಪ್ರವೇಶಿಸಿರುವುದು. ಇದನ್ನ ಬಿಜೆಪಿಯವರು ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

Comments (0)

Your email address will not be published. Required fields are marked *

Back to top button