ರಾಜಕೀಯರಾಜ್ಯಸುದ್ದಿ

ಸುತ್ತೂರು ಜಾತ್ರೆಯಲ್ಲಿ ಅಮಿತ್​ ಶಾ ; ಮೈಸೂರಲ್ಲಿ ಬಿಜೆಪಿ ಚಾಣಕ್ಯ

ಮೈಸೂರು ; ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಇಂದು ಬೆಳಗ್ಗಿನ ಜಾವ ಮೈಸೂರಿಗೆ ಆಗಮಿಸಿದ್ದಾರೆ. ಮುಂಜಾನೆ 3 ಗಂಟೆಗೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿದ ಅಮಿತ್ ಶಾ, ಇಲ್ಲಿಂದ ರಸ್ತೆ ಮಾರ್ಗದ ಮೂಲಕ ತೆರಳಿ ಱಡಿಸನ್ ಬ್ಲೂ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ್ದಾರೆ.

ಱಡಿಸನ್ ಬ್ಲೂ ಹೋಟೆಲ್​ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಅಮಿತ್ ಶಾ ಆಗಮನಕ್ಕೂ ಮುನ್ನ ಅವರು ಸಂಚರಿಸುವ ರಸ್ತೆಯಲ್ಲಿ ಕಾರು ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಮೈಸೂರು ನಂಜನಗೂಡು ರಸ್ತೆ ಮಧ್ಯೆ ಹಾಕಲಾಗಿದ್ದ ಬ್ಯಾರಿಕೇಡ್‌ಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿಕ್ಕಿಯಾಗಿದೆ. ತಕ್ಷಣ ಪೊಲೀಸರು ಆ್ಯಂಬುಲೆನ್ಸ್ ಕರೆಸಿ ಗಾಯಾಳವನ್ನು ಆಸ್ಪತ್ರೆಗೆ ರವಾನಿಸಿದ್ದು, ಅಪಘಾತಕ್ಕೀಡಾಗಿದ್ದ ಕಾರನ್ನು ತೆರವುಗೊಳಿಸಿದ್ದಾರೆ.

ಅಮಿತ್ ಶಾ ಅವರು ಱಡಿಸನ್ ಬ್ಲೂ ಹೋಟೆಲ್​ನಿಂದ ಬೆಳಗ್ಗೆ 11ಕ್ಕೆ ಚಾಮುಂಡಿಬೆಟ್ಟಕ್ಕೆ ತೆರಳಲಿದ್ದಾರೆ. ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸುವರು. ಬಳಿಕ ಮಂಡಕಹಳ್ಳಿ ಏರ್​ಪೋರ್ಟ್​ಗೆ ತೆರಳಲಿದ್ದಾರೆ.

ಮಂಡಕಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮಕ್ಕೆ ತೆರಳಲಿದ್ದಾರೆ. ಅಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಸುತ್ತೂರು ಮಠದಲ್ಲಿ ಊಟ ಸೇವಿಸಲಿರುವ ಅಮಿತ್ ಶಾ, ಮಧ್ಯಾಹ್ನ 2.30ಕ್ಕೆ ರ‌್ಯಾಡಿಸನ್ ಬ್ಲೂ ಹೋಟೆಲ್​ಗೆ ಆಗಮಿಸಲಿದ್ದಾರೆ.

ಬಳಿಕ ಮಧ್ಯಾಹ್ನ 2.40ಕ್ಕೆ ಬಿಜೆಪಿ ಪ್ರಮುಖರ ಜತೆ ಸಭೆ ನಡೆಯಲಿದ್ದು, ಲೋಕಸಭೆ ಚುನಾವಣಾ ರಣತಂತ್ರ ಕುರಿತು ಸುಮಾರು 2 ಗಂಟೆಗಳ ಕಾಲ ಸಭೆ ನಡೆಯಲಿದೆ.

Comments (0)

Your email address will not be published. Required fields are marked *

Back to top button