ಗದಗ: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಜ.8 ರಂದು ನಟ ಯಶ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಕಟೌಟ್ ನಿಲ್ಲಿಸುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶದಿಂದಾಗಿ ಮೃತಪಟ್ಟ ಯುವಕರ ಮನೆಗಳಿಗೆ ರಾಜ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚೆನ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಪರಿಹಾರ ಚೆಕ್ ವಿತರಿಸಿದರು.
ಸೂರಣಗಿ ಗ್ರಾಮದಲ್ಲಿ ಜರುಗಿದ ದುರ್ಘಟನೆಯಲ್ಲಿ ಮೃತರಾದ ಹನುಮಂತಪ್ಪ, ಮಜ್ಜೂರಪ್ಪ, ಹರಿಜನ, ಮುರಳಿ ನೀಲಪ್ಪ ನಡುವಿನಮನಿ, ನವೀನ, ನೀಲಪ್ಪ, ಗಾಜಿ ಅವರುಗಳ ಕುಟುಂಬಗಳಿಗೆ ಹಾಗೂ ಗಾಯಾಳು ಕುಟುಂಬಗಳ ನೆರವಿಗೆ ಸರ್ಕಾರದ ವತಿಯಿಂದ ಅಗತ್ಯದ ಪರಿಹಾರ ವಿತರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಕೂಡಲೇ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ.ಗಳ ಪರಿಹಾರವನ್ನು ಘೋಷಣೆ ಮಾಡಿದ್ದರು.
ಸರ್ಕಾರದ ವತಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ.ಗಳ ಪರಿಹಾರ ಚೆಕ್ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಶುಕ್ರವಾರದಂದು ಕುಟುಂಬ ಸದಸ್ಯರುಗಳಿಗೆ ವಿತರಿಸಿದರು.
ನಂತರ ಮಾತನಾಡಿದ ಸಚಿವ ಎಚ್. ಕೆ. ಪಾಟೀಲ, ಮೃತರ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಮೂವರು ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ಹಾಗೂ ಮೂವರು ಗಾಯಾಳುಗಳಿಗೆ ತಲಾ ಐವತ್ತು ಸಾವಿರ ಪರಿಹಾರದ ಚೆಕ್ಕುಗಳನ್ನು ಇಂದು ವಿತರಿಸಲಾಗಿದೆ. ಘಟನೆಯಲ್ಲಿ ಇನ್ನೊಬ್ಬ ಗಾಯಾಳು ನಾಗರಾಜ ಅವರು ಇಂದು ಭೇಟಿಯಾದೆ. ಅವರಿಗೂ ಪರಿಹಾರ ಕೊಡಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೋಲಿಸ್ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.
ಮೃತರ ಕುಟುಂಬಕ್ಕೆ ಭೂ ಒಡೆತನ ಯೊಜನೆಯಡಿ, ಭೂಮಿ ನೀಡಲು ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ನಂತರ ಅವರಿಗೆ ಅನುಕಂಪದ ಆದಾರದಲ್ಲಿ ಭೂಮಿ ನೀಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.