ರಾಯಚೂರು: ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಹಾಲಿ ಶಾಸಕ ಡಾ.ಶಿವರಾಜ ಪಾಟೀಲ ಅವರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ಅವರಿಗೆ ಆಪ್ತರಾದವರನ್ನು ರಾಜ್ಯದಲ್ಲಿ ಪದಾಧಿಕಾರಿಗಳಾಗಿ ಆಯ್ಕೆ ಮಾಡಲಾಗಿದ್ದು, ಅದರಂತೆ ರಾಯಚೂರಿನಲ್ಲಿ ಶಾಸಕ ಡಾ.ಶಿವರಾಜ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.
ಕಳೆದ ಕೆಲ ದಿನಗಳಿಂದ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆಯ ಬಗ್ಗೆ ಪಕ್ಷದಲ್ಲಿ ಗುಸು ಗುಸು ನಡೆದಿತ್ತು. ಡಾ.ಶಿವರಾಜ ಪಾಟೀಲ ಅವರ ಆಯ್ಕೆಯ ಮೂಲಕ ಪಕ್ಷದ ಆಂತರಿಕ ಚರ್ಚೆಗೆ ತೆರೆ ಬಿದ್ದಿದೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಜಿಲ್ಲಾಧ್ಯಕ್ಷರ ಆಯ್ಕೆ ಮಹತ್ವದ್ದಾಗಿರುವುದರಿಂದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಅಳೆದು ತೂಗಿ ಈ ಆಯ್ಕೆ ಮಾಡಿದ್ದಾರೆ.