
ವಿಜಯಪುರ : ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವೇಳೆ ಗ್ರಾಮಸ್ಥರು ಕಳ್ಳರ ಗ್ಯಾಂಗ್ನ್ನು ತಡೆದು ಗೋವುಗಳನ್ನು ರಕ್ಷಣೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೆಬೇವನೂರು ಗ್ರಾಮದಲ್ಲಿ ನಡೆದಿದೆ.

ಮಹಾರಾಷ್ಟ್ರದಿಂದ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣಕ್ಕೆ ಬುಲೆರೋ ಪಿಕ್ಅಪ್ ಗೂಡ್ಸ್ ವಾಹನಗಳ ಮೂಲಕ ಸಾಗಿಸುತ್ತಿದ್ದರು. ಈ ವೇಳೆ 110ಕ್ಕೂ ಹೆಚ್ಚು ಗೋವುಗಳನ್ನು ಹಿರೆಬೇವನೂರು ಗ್ರಾಮಸ್ಥರು ರಕ್ಷಣೆ ಮಾಡಿದ್ದಾರೆ. ಮಧ್ಯರಾತ್ರಿ ಅಕ್ರಮವಾಗಿ ಸಾಗಿಸುತ್ತಿದ್ದ ವಾಹನಗಳನ್ನು ಜನರು ತಡೆಯುತ್ತಿದ್ದಂತೆ ಎರಡು ವಾಹನಗಳ ಚಾಲಕರು ಪರಾರಿಯಾಗಿದ್ದು, ಓರ್ವ ಚಾಲಕ ಸಿಕ್ಕಿಬಿದ್ದಿದ್ದಾನೆ. ಇಂಡಿ ಗ್ರಾಮೀಣ ಪೊಲೀಸ್ ಠಾಣೆಗೆ ಗ್ರಾಮಸ್ಥರು ಮಾಹಿತಿ ನೀಡಿದ್ದು, ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಅಗಮಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸಿದರು. ಈ ವೇಳೆ ವಾಹನದಲ್ಲೇ ಮೃತಪಟ್ಟಿದ್ದ1 ಆಕಳು ಹಾಗೂ 11 ಕರುಗಳ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಿದರು. ಉಳಿದ ಗೋವು ಹಾಗೂ ಕರುಗಳನ್ನು ವಿಜಯಪುರದ ಗೋಶಾಲೆಗೆ ಕಳುಹಿಸಲಾಗಿದೆ. ಆಕಳು ಹಾಗೂ ಕರುಗಳನ್ನು ಎಲ್ಲಿಂದ ಎಲ್ಲಿಗೆ ಹಾಗೂ ಯಾರಿಗೆ ಸಾಗಾಟ ಮಾಡುತ್ತಿದ್ದ ವಿಚಾರ ತನಿಖೆಯಿಂದ ಬಹಿರಂಗವಾಗಬೇಕಿದೆ.




