
ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರವನ್ನು ಜಾಗತಿಕ ಮಟ್ಟಕ್ಕೆ ಏರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್ನಲ್ಲಿ ಮಹತ್ವದ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಎಡಿಬಿ (ADB) ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದ ‘ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ’ ಜಾರಿಗೆ ತರಲಾಗುತ್ತಿದ್ದು, ಇದರಡಿ 40 ಸರ್ಕಾರಿ ಪದವಿ ಕಾಲೇಜು ಹಾಗೂ 11 ಪಾಲಿಟೆಕ್ನಿಕ್ಗಳನ್ನು ಮಾದರಿ ಸಂಸ್ಥೆಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಅತಿ ಮುಖ್ಯವಾಗಿ, ಶೈಕ್ಷಣಿಕ ಸಂಸ್ಥೆಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ‘ರೋಹಿತ್ ವೇಮುಲ ಕಾಯ್ದೆ’ ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ.
ಬಜೆಟ್ನ ಪ್ರಮುಖ ಮುಖ್ಯಾಂಶಗಳು:
- ಬೃಹತ್ ನೇಮಕಾತಿ: ಸರ್ಕಾರಿ ಕಾಲೇಜುಗಳಲ್ಲಿ 2,000 ಹಾಗೂ ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಸೇರಿ ಒಟ್ಟು 3,000 ಬೋಧಕ ಹುದ್ದೆಗಳ ಭರ್ತಿಗೆ ಚಾಲನೆ!
- ರೋಹಿತ್ ವೇಮುಲ ಕಾಯ್ದೆ: ಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯ ತಡೆಯಲು ರಾಜ್ಯದ ಎಲ್ಲಾ ವಿವಿಗಳಲ್ಲಿ ಹೊಸ ಕಟ್ಟುನಿಟ್ಟಿನ ಕಾಯ್ದೆ ಜಾರಿ.
- ಮಹಿಳಾ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ: ಇನ್ಮುಂದೆ ಸರ್ಕಾರಿ ಕಾಲೇಜುಗಳ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಸೌಲಭ್ಯ ಲಭ್ಯ.
- ವಿದ್ಯಾರ್ಥಿ ಸಂಘಗಳ ಚುನಾವಣೆ: ಪ್ರಜಾಪ್ರಭುತ್ವ ಮೌಲ್ಯ ಬೆಳೆಸಲು ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಮತ್ತೆ ಚುನಾವಣೆ ನಡೆಸಲು ಸರ್ಕಾರದ ನಿರ್ಧಾರ.
- ಯುವಿಸಿಇ ಅಭಿವೃದ್ಧಿ: ಬೆಂಗಳೂರಿನ ಯುವಿಸಿಇ (UVCE) ಅನ್ನು ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಈ ವರ್ಷವೂ 100 ಕೋಟಿ ರೂ. ಅನುದಾನ.
- ಹೊಸ ಕಾಲೇಜುಗಳ ಸ್ಥಾಪನೆ: ವಿಜಯಪುರದ ಚಡಚಣ, ಬೆಳಗಾವಿ ಗ್ರಾಮಾಂತರ ಹಾಗೂ ಮೈಸೂರಿನ ನರಸಿಂಹರಾಜ ಕ್ಷೇತ್ರದಲ್ಲಿ ಹೊಸ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸ್ಥಾಪನೆ.
- ಡಿಜಿಟಲ್ ಗ್ರಂಥಾಲಯ: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ಧಾರವಾಡ ಮತ್ತು ಬೆಂಗಳೂರಿನಲ್ಲಿ ತಲಾ 10 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಡಿಜಿಟಲ್ ಗ್ರಂಥಾಲಯ ನಿರ್ಮಾಣ.
- ಹೊಸ ತಾಂತ್ರಿಕ ಕೋರ್ಸ್: ಎಐ (AI), ಮಷಿನ್ ಲರ್ನಿಂಗ್ ಸೇರಿದಂತೆ 15 ಹೊಸ ಕೋರ್ಸ್ಗಳು ಸರ್ಕಾರಿ ಪಾಲಿಟೆಕ್ನಿಕ್ಗಳಲ್ಲಿ ಪ್ರಾರಂಭ.




